ಕೊಪ್ಪಳ: ’ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಾಯಕತ್ವ ವಹಿಸುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ’ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
ಎರಡು ಬಾರಿ ಬಿಜೆಪಿಯಿಂದ ಸಂಸದರಾಗಿರುವ ಅವರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ ಜೋಶಿ ಮತ್ತು ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನಲ್ಲಿ ಮನವೊಲಿಸುವ ಪ್ರಯತ್ನ ಮಾಡಿದರು.
ಸಭೆಯ ಬಳಿಕ ಸಂಗಣ್ಣ ಕರಡಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ’ಒಂದು ಕಡೆ ಟಿಕೆಟ್ ಬದಲಿಸಿದರೆ ಬೇರೆ ಕಡೆಯೂ ಇದೇ ಸಮಸ್ಯೆಯಾಗುತ್ತದೆ. ಆದರೂ ಈ ವಿಚಾರ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ರಾಜ್ಯದ ಮುಖಂಡರು ಹೇಳಿದ್ದಾರೆ. ಅದು ಏನೇ ಆಗಲಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಇರುವೆ. ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುವುದಿಲ್ಲ. ಪ್ರಚಾರದ ನಾಯಕತ್ವವೂ ವಹಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಅಭ್ಯರ್ಥಿಯಾಗಿರುವ ಡಾ. ಬಸವರಾಜ ಕ್ಯಾವಟರ್ ’ಸಂಗಣ್ಣ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದ್ದಾರೆ.