ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ)ದ ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಸೋಮವಾರ (ಮಾರ್ಚ್ 25) ಬಿಜೆಪಿ ಸೇರಲಿದ್ದಾರೆ.
ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಜನಾರ್ದನ ರೆಡ್ಡಿ ಅವರು ಭಾನುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದಿದ್ದರು. ‘ಬಿಜೆಪಿ ಸೇರುವ ಕುರಿತು ಈ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು‘ ಎಂದು ಕೆಆರ್ಪಿಪಿ ಪಕ್ಷದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ದಮ್ಮೂರು ರಾಜಶೇಖರ್ ಪ್ರಜಾವಾಣಿಗೆ ತಿಳಿಸಿದರು.
ಸೋಮವಾರ ಬೆಳಗ್ಗೆ 10 ಗಂಟೆಗೆ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜನಾರ್ದನ ರೆಡ್ಡಿ ಇತ್ತೀಚೆಗಷ್ಟೇ ದೆಹಲಿಯಲ್ಲಿ ಭೇಟಿಯಾಗಿ ಬಂದಿದ್ದರು. ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಹೈಕಮಾಂಡ್ಗೆ ತಮ್ಮ ಅಭಿಪ್ರಾಯ ತಿಳಿಸಿರುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಹಲವು ಬಾರಿ ಹೇಳಿದ್ದರು.