ಹುಬ್ಬಳ್ಳಿ: ನಗರದ ಸೆಟ್ಲಮೆಂಟ್ನ ಯಂಗ್ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೈದಾನದ ಎದುರಿನ ರಸ್ತೆಯಲ್ಲಿ ಜಗ್ಗಲಗಿ, ಕರಡಿ ಮಜಲು ವಾದ್ಯಮೇಳದ ತಂಡದವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇನ್ನಿತರ ಮುಖಂಡರನ್ನು ಸ್ವಾಗತಿಸಿ, ಮೆರವಣಿಗೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಧಾರವಾಡ ಜಿಲ್ಲೆಯ ವಿವಿಧ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.
ಸೆಟ್ಲಮೆಂಟ್ ರಸ್ತೆ ಅಕ್ಕ-ಪಕ್ಕ ಕಾಂಗ್ರೆಸ್ ಮುಖಂಡರ ಕಟೌಟ್ಗಳು ರಾರಾಜಿಸುತ್ತಿವೆ. ಸಮಾವೇಶಕ್ಕೆ ಬರುವ ಕಾರ್ಯಕರ್ತರ, ಮಹಿಳೆಯರ ಹಾಗೂ ಮಕ್ಕಳ ಕೈಯ್ಯಲ್ಲಿ ಕಾಂಗ್ರೆಸ್ ಬಾವುಟ ಪ್ರದರ್ಶನಗೊಳ್ಳುತ್ತಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯಮಟ್ಟದ ಎಲ್ಲ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾಯಕರು ಮತಯಾಚಿಸಲಿದ್ದಾರೆ.