ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಬಹುಮತದತ್ತ ಮುನ್ನಡೆದಿದೆ.
ಬೆಳಿಗ್ಗೆ 10.50ರ ಟ್ರೆಂಡ್ ವೇಳೆಗೆ ಕಾಂಗ್ರೆಸ್ 116 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.
ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಸರಳ ಬಹುಮತ ಪಡೆಯಲು 113 ಸ್ಥಾನಗಳನ್ನು ಗಳಿಸಬೇಕಿದೆ.
ಬಿಜೆಪಿ 72, ಜೆಡಿಎಸ್ 30 ಮತ್ತು ಇತರರು 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಆಡಳಿತಾರೂಢ ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುನ್ನಡೆ ಗಳಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಸಿಹಿ ಹಂಚಿ ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ.