ಕಾರವಾರ: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿವೆ.
ಹಳಿಯಾಳ, ಕಾರವಾರ, ಭಟ್ಕಳ ಮತ್ತು ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, ಯಲ್ಲಾಪುರ ಮತ್ತು ಕುಮಟಾದಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾದರು.
ಭಟ್ಕಳದ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ 35 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುನೀಲ ನಾಯ್ಕ ಅವರನ್ನು ಪರಾಭವಗೊಳಿಸಿದರು.
ಹಳಿಯಾಳದಲ್ಲಿ ಆರ್.ವಿ.ದೇಶಪಾಂಡೆ 9ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಶಿರಸಿ ಕ್ಷೇತ್ರದಿಂದ ಆಯ್ಕೆಯಾದ ಭೀಮಣ್ಣ ನಾಯ್ಕ 29 ವರ್ಷಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾತೆ ತೆರೆದರು. ಕಾರವಾರದಲ್ಲಿ ಕಳೆದ ಚುನಾವಣೆಯಲ್ಲಿ ಸೋಲುಕಂಡಿದ್ದ ಸತೀಶ ಸೈಲ್ ಎರಡನೆ ಬಾರಿಗೆ ಶಾಸಕರಾದರು.
ಕಳೆದ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ಯಲ್ಲಾಪುರ ಮತ್ತು ಕುಮಟಾ ಕ್ಷೇತ್ರವನ್ನು ಮಾತ್ರ ಉಳಿಸಿಕೊಂಡಿತು. ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ ಗೆಲುವು ಸಾಧಿಸಿದರು. ಕುಮಟಾದಲ್ಲಿ ಬಿಜೆಪಿಯ ದಿನಕರ ಶೆಟ್ಟಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಲ್ಪ ಅಂತರದ ಗೆಲುವು ಸಾಧಿಸಿದರು. ಮತಗಳ ಅಂತಿಮ ಲೆಕ್ಕಾಚಾರ ಇನ್ನಷ್ಟೆ ಸ್ಪಷ್ಟವಾಗಬೇಕಿದೆ.