ಬೆಳಗಾವಿ: ಇಲ್ಲಿನ ಟಿಳಕ ಚೌಕ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಮತಯಾಚಿಸಲು ಗುರುವಾರ ಬಂದಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು.
ಎಂಇಎಸ್ ವಿರುದ್ಧ ಪ್ರಚಾರ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಫಡಣವೀಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಫಡಣವೀಸ್ ಅವರಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದರು.
ನಗರಕ್ಕೆ ಬುಧವಾರ ಆಗಮಿಸಿದ್ದ ಶಿವಸೇನಾ(ಉದ್ಧವ್ ಠಾಕ್ರೆ ಬಣ) ರಾಜ್ಯ ವಕ್ತಾರ ಸಂಜಯ್ ರಾವುತ್, ‘ಎಂಇಎಸ್ ವಿರುದ್ಧ ಪ್ರಚಾರಕ್ಕೆ ಬರುವ ಮಹಾರಾಷ್ಟ್ರದ ನಾಯಕರಿಗೆ ತಕ್ಕ ಪಾಠ ಕಲಿಸಿ’ ಎಂದು ಕರೆ ಕೊಟ್ಟಿದ್ದರು.