ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಅಭ್ಯರ್ಥಿ ಯಾರೆಂದು ‍ಕಾಂಗ್ರೆಸ್ ಹೇಳಲಿ: ಬಿ.ಎಸ್. ಯಡಿಯೂರಪ್ಪ ಸವಾಲು

Published : 16 ಏಪ್ರಿಲ್ 2024, 14:25 IST
Last Updated : 16 ಏಪ್ರಿಲ್ 2024, 14:25 IST
ಫಾಲೋ ಮಾಡಿ
Comments

ದಾವಣಗೆರೆ: ‘ಕಾಂಗ್ರೆಸ್ ಪರಿಶಿಷ್ಟರ ವಿರೋಧಿಯಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗಾಗಿ ಇಟ್ಟಿದ್ದ ₹11,164 ಕೋಟಿ ಹಣವನ್ನು ಬೇರೆ ಯೋಜನೆಗಳಿಗೆ ವರ್ಗಾಹಿಸಿದ್ದು, ಅನ್ಯಾಯ ಮಾಡಲಾಗಿದೆ’ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

‘ಕಾಂಗ್ರೆಸ್ ಪಕ್ಷದ ಸ್ನೇಹಿತರು ಬಹಳಷ್ಟು ಮಾತನಾಡುತ್ತಾರೆ. ಅದಕ್ಕೆ ಚುನಾವಣೆಯಲ್ಲಿ ಮತದಾರರು ಉತ್ತರ ಕೊಡುತ್ತಾರೆ. ಕಾಂಗ್ರೆಸ್‌ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಲಿ ಎಂದು ಸವಾಲು ಹಾಕಿದ ಯಡಿಯೂರಪ್ಪ, ಯಾವುದೇ ವ್ಯಕ್ತಿಯ ಹೆಸರು ಹೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲಿದ್ದು, ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ 5 ವರ್ಷಗಳ ಕಾರ್ಯಕ್ರಮವನ್ನು ಈಗಾಗಲೇ ರೂಪಿಸಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆ ಮುಂದುವರಿಯಲಿವೆ’ ಎಂದರು.

‘ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ಮೈತ್ರಿಯಿಂದಾಗಿ ನಿಶ್ಚಿತವಾಗಿ ಗುರಿ ಮುಟ್ಟುತ್ತೇವೆ. ನಾನು ಈಗಾಗಲೇ 23 ಕ್ಷೇತ್ರಗಳಲ್ಲೂ ಸುತ್ತಿದ್ದೇನೆ. ಉಳಿದ ಕ್ಷೇತ್ರಗಳಿಗೂ ಹೋಗುವೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅಂಬೇಡ್ಕರ್ ಅವರನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಎರಡು ಬಾರಿ ಚುನಾವಣೆಗೆ ನಿಂತಾಗ ಸೋಲಿಸಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅಂಬೇಡ್ಕರ್ ಹುಟ್ಟಿದ ಊರಿನಲ್ಲಿ 2 ಲಕ್ಷ ಜನ ದರ್ಶನ ಪಡೆಯುವ ಹಾಗೆ ಮನೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ನಾಗಪುರದಲ್ಲಿ ಬೌದ್ಧದರ್ಮ ಸ್ವೀಕರಿಸಿದ ಜಾಗವನ್ನು ಧೀಕ್ಷಾಭೂಮಿಯನ್ನಾಗಿ ಮಾಡಲಾಗಿದೆ. ಲಂಡನ್‌ನಲ್ಲಿ ಶಿಕ್ಷಣ ಪಡೆದ ಜಾಗವನ್ನು ಖರೀದಿಸಿ ದೊಡ್ಡ ಹಾಸ್ಟೆಲ್ ನಿರ್ಮಾಣ ಮಾಡಲಾಗಿದೆ. ಮುಂಬೈನಲ್ಲಿರುವ ಸಮಾಧಿ ಜಾಗದ ಅಭಿವೃದ್ಧಿ. ದೆಹಲಿಯಲ್ಲಿ ಅವರು ಇದ್ದ ಮನೆಯನ್ನು ವಸ್ತು ಸಂಗ್ರಹಾಲಯ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಕೇಂದ್ರ ಸರ್ಕಾರದಿಂದ. ತೆರಿಗೆ ಹಣ ಬಂದಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರದಿಂದ ಬಂದಿರುವ ಹಣದ ಬಗ್ಗೆ ಇಷ್ಟರಲ್ಲಿಯೇ ದಾಖಲೆ ಬಿಡುಗಡೆ ಮಾಡುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು.

ಮಾಜಿ ಸಚಿವ ಮುರುಗೇಶ ನಿರಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಯಶವಂತರಾವ್ ಜಾಧವ್, ಗಿರೀಶ್ ಉಪ್ಪಾರ್, ಕೊಳೇನಹಳ್ಳಿ ಸತೀಶ್ ಇದ್ದರು.

‘ಮೋದಿ ಮುಂದೆ ಗ್ಯಾರಂಟಿಗಳು ಗೌಣ’
‘ಗ್ಯಾರಂಟಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಗೌಣ. ಯಾವುದೇ ಯೋಜನೆಗಳು ಈ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ನಾನು ಹೇಳುತ್ತಿಲ್ಲ. 24ರಿಂದ 25 ಸ್ಥಾನ ಗೆಲ್ಲುತ್ತದೆ ಎಂದು ಸಮೀಕ್ಷೆಯೇ ಹೇಳುತ್ತಿದೆ’ ಎಂದು ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT