ಬೆಂಗಳೂರು: ‘ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ, ಈ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಶಾಸಕರು, ಪರಾಜಿತ ಅಭ್ಯರ್ಥಿಗಳೇ ಹೊಣೆಗಾರಿಕೆ ವಹಿಸಿಕೊಂಡು ಕೆಲಸ ಮಾಡಬೇಕು’ ಎಂದು ಈ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜಮೀರ್ ಅಹಮದ್ ಖಾನ್ ಹೇಳಿದರು.
ಚುನಾವಣೆ ಹೊಣೆಗಾರಿಕೆ ಕುರಿತಂತೆ ಕ್ಷೇತ್ರ ವ್ಯಾಪ್ತಿಯ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಆಗಿದೆ. ಲೋಕಸಭೆ ಚುನಾವಣೆಯಲ್ಲಿ ಇದರಿಂದ ಪಕ್ಷಕ್ಕೆ ಸಹಾಯ ಆಗಲಿದೆ. ಈ ಬಗ್ಗೆ ಜನರ ವಿಶ್ವಾಸ ಗಳಿಸುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.
‘ಈ ಬಾರಿ ಮನ್ಸೂರ್ ಅಲಿ ಖಾನ್ ಗೆಲ್ಲುವ ಅವಕಾಶ ಇದೆ. ಕಾಂಗ್ರೆಸ್ ಬಗ್ಗೆ ಮತದಾರರಲ್ಲಿ ವಿಶ್ವಾಸವೂ ಇದೆ. ಶಾಸಕರು ಪ್ರತಿ ಕ್ಷೇತ್ರದಲ್ಲಿ ಎಲ್ಲರನ್ನೂ ಜತೆಗೂಡಿಸಿಕೊಂಡು ಕೆಲಸ ಮಾಡಬೇಕು. ಪ್ರತಿ ಕ್ಷೇತ್ರದಲ್ಲಿಯೂ ಲೀಡ್ ಸಿಗುವಂತೆ ಕಾರ್ಯನಿರ್ವಹಿಸಬೇಕು’ ಎಂದರು.
ಸಭೆಯಲ್ಲಿ ಮನ್ಸೂರ್ ಅಲಿ ಖಾನ್, ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಾಜಿ ಸಚಿವ ನಾಗೇಶ್, ಆನಂದ ಬಾಬು ಇದ್ದರು.