ಕೊಳ್ಳೇಗಾಲ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.
ಬಾಲರಾಜು ಪರ ರೋಡ್ ಶೋ ನಡೆಸಲು ನಗರಕ್ಕೆ ಬಂದಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಟ ಇನ್ನು ಮುಂದೆ ನಡೆಯುವುದಿಲ್ಲ. ಚಾಮರಾಜನಗರದ ಜಿಲ್ಲೆಯಲ್ಲಿ ಅವರು ಮೂಲೆಗುಂಪಾಗಿದ್ದಾರೆ. ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹಾಗೂ ಅಳಿಯ ಮಾಜಿ ಶಾಸಕ ಹರ್ಷವರ್ಧನ್ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾಗಿ ನಮ್ಮ ಗೆಲುವು ಖಚಿತ’ ಎಂದರು.
‘ಶ್ರೀನಿವಾಸ್ ಪ್ರಸಾದ್ ಅವರು ಅನುಭವಿ ರಾಜಕಾರಣಿ. ಆ ಕಾರಣ ಎಲ್ಲ ಪಕ್ಷದವರು ಅವರ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡು ಬರುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಅವರು ಬೆನ್ನೆಲುಬಾಗಿ ನಿಂತಿದ್ದಾರೆ’ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರ ಕಿವಿಗೆ ಹೂ ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರವಾಗಿದೆ. ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡು ದಲಿತ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಮಹಿಳೆಯರಿಗೆ ₹2000 ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮತ್ತೊಂದು ಕಡೆ ಮದ್ಯದ ಬೆಲೆಯಲ್ಲಿ ಹೆಚ್ಚಿಸುತ್ತಿದ್ದಾರೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ’ ಎಂದು ದೂರಿದರು.
ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 10 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹2.93 ಲಕ್ಷ ಕೋಟಿ ತೆರಿಗೆ ಪಾಲು ಕೊಟ್ಟಿದೆ. 2004ರಿಂದ 2014ರವರೆಗೆ ಯುಪಿಎ ಅವಧಿಯಲ್ಲಿ ಕೇವಲ ₹80 ಸಾವಿರ ಕೋಟಿ ತೆರಿಗೆ ಪಾಲು ರಾಜ್ಯಕ್ಕೆ ಬಂದಿತ್ತು. 10 ವರ್ಷಗಳಲ್ಲಿ ವಿವಿಧ ಯೋಜನೆಗಳಿಗೆ ಎನ್ಡಿಎ ಸರ್ಕಾರ ₹2.36 ಲಕ್ಷ ಕೋಟಿ ಅನುದಾನ ಕೊಟ್ಟಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಬಂದಿದ್ದು ಕೇವಲ ₹60 ಸಾವಿರ ಕೋಟಿ’ ಎಂದು ವಿಜಯೇಂದ್ರ ಹೇಳಿದರು.
‘ಜಮೀನಿಗೆ ರೈತರು ವಿದ್ಯುತ್ ಪರಿವರ್ತಕ ಹಾಕಬೇಕಾದರೆ, ಈಗ ₹3 ಲಕ್ಷ ಹಣ ಕಟ್ಟಬೇಕು ಮಹಿಳೆಯರಿಗೆ ಉಚಿತ ಬಸ್ ಎಂದು ಹೇಳುತ್ತಾರೆ. ಆದರೆ, ಪುರುಷರ ಬಳಿ ದುಪ್ಟಟ್ಟು ಹಣ ವಸೂಲಿ ಮಾಡುತ್ತಾರೆ. ಕಾಂಗ್ರೆಸ್ನವರು ಹಣ, ತೋಳು, ಹೆಂಡದ ಬಲದಿಂದ ಚುನಾವಣೆ ಮಾಡುತ್ತಾರೆ’ ಎಂದು ದೂರಿದರು.
ರೋಡ್ ಶೋ: ಸುದ್ದಿಗೋಷ್ಠಿಯ ನಂತರ ವಿಜಯೇಂದ್ರ ಹಾಗೂ ಮುಖಂಡರು ಎಸ್.ಬಾಲರಾಜು ಪರ ರೋಡ್ ಶೋ ನಡೆಸಿದರು. ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರು ಬಿಸಿಲನ್ನೂ ಲೆಕ್ಕಿಸದೆ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.
ವಿಷ್ಣುವರ್ಧನ್ ರಸ್ತೆಯಲ್ಲಿ ಪ್ರಚಾರದ ರಥಕ್ಕೆ ಚಾಲನೆ ನೀಡಿ ಅಲ್ಲಿಂದ ಡಾ.ರಾಜಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಸಾಗಿ ಬಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಹನೂರು ಶಾಸಕ ಎಂ.ಆರ್ ಮಂಜುನಾಥ್, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್, ಕ್ಷೇತ್ರ ಪ್ರಭಾರಿ ಫಣೀಶ್, ಸಂಚಾಲಕ ಪ್ರೊ.ಮಲ್ಲಿಕಾರ್ಜುನಪ್ಪ ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.