ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಗ್ಯಾರಂಟಿ'ಗಳಿಂದ ರಾಜ್ಯದ ಬೊಕ್ಕಸ ಖಾಲಿ: ಕುಮಾರಸ್ವಾಮಿ

ದಾಸರಹಳ್ಳಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಪರ ಎಚ್‌ಡಿಕೆ ಮತ್ತು ಡಿವಿಎಸ್ ಮತಯಾಚನೆ
Published 22 ಏಪ್ರಿಲ್ 2024, 0:18 IST
Last Updated 22 ಏಪ್ರಿಲ್ 2024, 0:18 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. 5 ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಸಂಪೂರ್ಣ ಬರಿದು ಮಾಡಿ ಮುಂದಿನ ದಿನಗಳಲ್ಲಿ ನಿಮ್ಮನ್ನು ಸಾಲಗಾರರನ್ನಾಗಿ ಮಾಡುವುದೇ ರಾಜ್ಯ ಸರ್ಕಾರದ ಸಾಧನೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಭಾನುವಾರ ಹಮ್ಮಿಕೊಂಡಿದ್ದ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರ ಇದುವರೆಗೂ ₹1.05 ಸಾವಿರ ಕೋಟಿ ಸಾಲ ಮಾಡಿದೆ. ಈ ಸಾಲವನ್ನು ತೀರಿಸುವವರು ಯಾರು ? ಅದನ್ನು ನೀವೇ (ಜನರು) ತೀರಿಸಬೇಕಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ತೀರ್ಮಾನ ಮಾಡಿ ಮತ ಚಲಾಯಿಸಿ’ ಎಂದು ಕೋರಿದರು.

ಸಂಸದ ಡಿ.ವಿ. ಸದಾನಂದ ಗೌಡ, ‘ಕಳೆದ ಹಲವು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಈ ಬಾರಿಯೂ ದೇಶದಾದ್ಯಂತ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಅವರು ವಿಜಯಶಾಲಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೋಭಾ ಕರಂದ್ಲಾಜೆ ಮಾತನಾಡಿ, ‘ಎಚ್‌.ಡಿ. ದೇವೇಗೌಡ ಅವರು ದೇಶದ ಭದ್ರತೆಗಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮೈತ್ರಿಕೂಟದ ಕಾರ್ಯಕರ್ತರು, ‘ಮತ್ತೊಮ್ಮೆ ದೇಶಕ್ಕೆ ಮೋದಿ’ ಎಂಬ ಸಂದೇಶವನ್ನು ಮನೆ ಮನೆಗೆ ತಲುಪಿಸುತ್ತಿದ್ದಾರೆ. ಈ ಬಾರಿಯೂ ಹೆಚ್ಚಿನ ಮತಗಳ ಗೆಲುವು ನಮ್ಮದಾಗಲಿದೆ’ ಎಂದರು

ಶಾಸಕ ಎಸ್. ಮುನಿರಾಜು, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಅಂದಾನಪ್ಪ, ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಂ. ಮುನಿಸ್ವಾಮಿ, ಮಂಡಲ ಅಧ್ಯಕ್ಷ ಸೋಮಶೇಖರ್, ಬಾಗಲಗುಂಟೆ ವಾರ್ಡ್ ಜೆಡಿಎಸ್ ಅಧ್ಯಕ್ಷ ಹನುಮಂತ ರಾಯಪ್ಪ ಹಾಜರಿದ್ದರು.

ದಾಸರಹಳ್ಳಿ, ಚೊಕ್ಕಸಂದ್ರ, ಪೀಣ್ಯ 2ನೇ ಹಂತ, ಹೆಗ್ಗನಹಳ್ಳಿ ಸುಂಕದಕಟ್ಟೆವರೆಗೂ ರೋಡ್ ಶೋ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT