ಕೋಲಾರ: ಭಾರಿ ಕಗ್ಗಂಟಾಗಿ ಪರಿಣಮಿಸಿರುವ ಕೋಲಾರ ಮೀಸಲು ಕ್ಷೇತ್ರದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಸೋಮವಾರ ಟಿಕೆಟ್ ಘೋಷಿಸುವುದು ಬಹುತೇಕ ನಿಚ್ಚಳವಾಗಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 28ರಂದು ಆರಂಭವಾಗಲಿದ್ದು, ಕೇವಲ ಮೂರು ದಿನ ಬಾಕಿ ಉಳಿದಿದೆ. ಆದರೆ, ಟಿಕೆಟ್ ಹಗ್ಗಜಗ್ಗಾಟ ನಿಂತಿಲ್ಲ.
ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಸಿ.ಎಂ.ಮುನಿಯಪ್ಪ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕಪೆದ್ದಣ್ಣ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಟಿಕೆಟ್ ಗಿಟ್ಟಿಸಿಕೊಳ್ಳಲು ಭಾರಿ ಕಸರತ್ತು ನಡೆಸಿದ್ದಾರೆ.
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬೆನ್ನಲೇ ಭಾನುವಾರ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಟಿಕೆಟ್ಗೆ ದುಂಬಾಲು ಬಿದ್ದಿದ್ದಾರೆ.
ಈ ಬಾರಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಸಿ.ಎಂ.ಮುನಿಯಪ್ಪ ಅವರಿಗೆ ಟಿಕೆಟ್ ನೀಡದಿದ್ದರೆ ಘಟಬಂಧನ್ನ ಯಾರೊಬ್ಬರೂ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುವುದಿಲ್ಲವೆಂದು ನೇರವಾಗಿ ಹೇಳಿರುವುದು ಗೊತ್ತಾಗಿದೆ. ಅಲ್ಲದೇ, ತಮ್ಮ ಬೆಂಬಲಕ್ಕಿರುವ ಶಾಸಕರ ಪಟ್ಟಿಯನ್ನೂ ಈಗಾಗಲೇ ಹೈಕಮಾಂಡ್ಗೆ ನೀಡಿದ್ದಾರೆ. ಈ ಪತ್ರದಲ್ಲಿ ರಮೇಶ್ ಕುಮಾರ್, ಸಚಿವ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರ ಸಹಿ ಇದೆ ಎನ್ನಲಾಗಿದೆ.
ಈ ಮಧ್ಯೆ, ಕೆ.ಎಚ್.ಮುನಿಯಪ್ಪ ಹಾಗೂ ಚಿಕ್ಕಪೆದ್ದಣ್ಣ ಅವರು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಲು ರಮೇಶ್ ಕುಮಾರ್ ನಿವಾಸಕ್ಕೆ ಹೋಗಿದ್ದರು ಎನ್ನಲಾಗಿದೆ. ಆದರೆ, ಭೇಟಿಗೆ ಅವಕಾಶ ಸಿಕ್ಕಿಲ್ಲ ಎಂಬುದು ಗೊತ್ತಾಗಿದೆ.
‘ಭೇಟಿ ಮಾಡಲು ಹೋದ ವೇಳೆ ರಮೇಶ್ ಕುಮಾರ್ ಮನೆಯಲ್ಲಿ ಇರಲಿಲ್ಲ. ಹಿಂದಿನ ದಿನವಷ್ಟೇ ರಮೇಶ್ ಕುಮಾರ್ ಹಾಗೂ ಮುನಿಯಪ್ಪ ಅಕ್ಕಪಕ್ಕ ಕುಳಿತು ಚೆನ್ನಾಗಿ ಮಾತನಾಡಿದ್ದಾರೆ. ಜಿಲ್ಲೆಯಲ್ಲಿನ ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿರುವುದು ಉತ್ತಮ ಹೆಜ್ಜೆ. ಟಿಕೆಟ್ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಸ್ಪಷ್ಟಪಡಿಸಿದರು.
ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಟಿಕೆಟ್ ಸಿ.ಎಂ.ಮುನಿಯಪ್ಪಗೋ, ಚಿಕ್ಕಪೆದ್ದಣ್ಣಗೋ? ಒಂದು ಬಣಕ್ಕೆ ನೀಡಿದರೆ ಮತ್ತೊಂದು ಬಣಕ್ಕೆ ಸಿಟ್ಟು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.