ನವದೆಹಲಿ: ‘ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕೆ.ಎಸ್.ಈಶ್ವರಪ್ಪ ಅವರ ಬೇಜವಾಬ್ದಾರಿ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ’ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ವಿಜಯೇಂದ್ರ ಏನು ಎಂಬುದನ್ನು ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ’ ಎಂದರು.
‘ತುಮಕೂರಿನಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಜೆ.ಸಿ.ಮಾಧುಸ್ವಾಮಿ ಅವರೊಂದಿಗೆ ನಾನು ಮಾತನಾಡುತ್ತೇನೆ. ಮಾಧುಸ್ವಾಮಿ ಹಾಗೂ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಜತೆಗೂಡಿ ಕೆಲಸ ಮಾಡಲಿದ್ದಾರೆ’ ಎಂದರು.
‘ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಐದು ಸಲ ಕರೆ ಮಾಡಿ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮ ಸ್ಥಾನಮಾನ ಸಿಗಲಿದೆ’ ಎಂದರು.
ಬಿ.ವೈ. ವಿಜಯೇಂದ್ರ ಮಾತನಾಡಿ, ‘ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯ ಘಟಕದ ಅಧ್ಯಕ್ಷನಾಗಿ ನನ್ನನ್ನು ಒಂದು ಅವಧಿಗೆ ನೇಮಕ ಮಾಡಿದ್ದಾರೆ ಎಂದು ಭಾವಿಸಿದ್ದೇನೆ’ ಎಂದರು.