ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Elections 2024 | ಕಾಂಗ್ರೆಸ್‌ನತ್ತ ವಾಲಿದ ಮಾಧುಸ್ವಾಮಿ

ಮುದ್ದಹನುಮೇಗೌಡ ಬದಲಿಸಲು ವರಿಷ್ಠರ ಚಿಂತನೆ?
Published 19 ಮಾರ್ಚ್ 2024, 9:05 IST
Last Updated 19 ಮಾರ್ಚ್ 2024, 9:05 IST
ಅಕ್ಷರ ಗಾತ್ರ

ತುಮಕೂರು: ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಪಕ್ಷ ತೊರೆಯಲು ಮುಂದಾಗಿದ್ದು, ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

ಕಳೆದ ವಿಧಾನಸಭೆ ಸೋಲಿನ ನಂತರ ಲೋಕಸಭೆಗೆ ಸ್ಪರ್ಧಿಸಲು ಸಜ್ಜಾಗಿದ್ದರು. ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲೆಯವರನ್ನು ಬಿಟ್ಟು ಹೊರಗಿನವರಿಗೆ ಅವಕಾಶ ನೀಡದಂತೆ ಬಹಿರಂಗವಾಗಿಯೇ ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದ್ದರು. ಸೋಮಣ್ಣ ಹೆಸರು ಪ್ರಕಟವಾಗುತ್ತಿದ್ದಂತೆ ಮತ್ತಷ್ಟು ಆಕ್ರೋಶ ಹೊರ ಹಾಕಿದ್ದರು. ಮನವೊಲಿಸಲು ಮುಂದಾದ ಸೋಮಣ್ಣ, ತಮ್ಮ ಮನೆಗೆ ಬರುವುದು ಬೇಡ ಎಂದು ಕಡ್ಡಿ ತುಂಡಾದಂತೆ ಹೇಳಿದ್ದರು.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟಿಕೆಟ್ ಕೊಡಿಸುತ್ತಾರೆ ಎಂದು ನಂಬಿದ್ದರು. ಅವರೂ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಕೋಪಿಸಿಕೊಂಡಿದ್ದರು. ಇದೇ ಅವಕಾಶವನ್ನು ಬಳಸಿಕೊಂಡ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೂರವಾಣಿ ಮೂಲಕ ಸಂಪರ್ಕಿಸಿ ಆಹ್ವಾನ ನೀಡಿದ್ದಾರೆ. ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮಾಧುಸ್ವಾಮಿ ಆಪ್ತ ಮೂಲಗಳು ತಿಳಿಸಿವೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ.ಪುರದಲ್ಲಿರುವ ಮಾಧುಸ್ವಾಮಿ ಮನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತಿತರ ನಾಯಕರು ಸೋಮವಾರ ರಾತ್ರಿ ಭೇಟಿನೀಡಿ ಮನವೊಲಿಸುವ ಪ್ರಯತ್ನ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ವರಿಷ್ಠರ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ‘ಇಷ್ಟೆಲ್ಲ ಆದಮೇಲೆ ನಿಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಇರುವುದಿಲ್ಲ’ ಎಂದು ನೇರವಾಗಿಯೇ ಹೇಳಿ ಕಳುಹಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

‘ಒಂದೆರಡು ದಿನ ಕಾದು ನೋಡಿ. ಎಲ್ಲವೂ ಒಳ್ಳೆಯದೇ ಆಗಲಿದೆ’ ಎಂದು ತಮ್ಮ ಬೆಂಬಲಿಗರು, ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

‘ಇನ್ನು ಅಂತಹ ಪ್ರಯತ್ನಗಳು ನಡೆದಿಲ್ಲ. ಮುಂದೆ ನೋಡೋಣ’ ಎಂದು ಮಾಧುಸ್ವಾಮಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಲೋಕಸಭೆಗೆ ಸ್ಪರ್ಧೆ ಸಾಧ್ಯತೆ

ಮಾಧುಸ್ವಾಮಿ ಕಾಂಗ್ರೆಸ್‌ಗೆ ಬಂದರೆ ನಿಯೋಜಿತ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಬದಲಾಗಿ ಅವರನ್ನೇ ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚಿಂತನೆ ನಡೆದಿದೆ. ಲೋಕಸಭೆಗೆ ಟಿಕೆಟ್ ಕೊಡುವುದಾದರೆ ಪಕ್ಷ ಸೇರುವುದಾಗಿ ಮಾಧುಸ್ವಾಮಿ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ಮುದ್ದಹನುಮೇಗೌಡ ಅವರಿಗೆ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅವಕಾಶ ಮಾಡಿಕೊಟ್ಟು, ಮಾಧುಸ್ವಾಮಿ ಅವರಿಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಲೋಕಸಭೆಗೆ ಟಿಕೆಟ್ ನೀಡಲು ಸಾಧ್ಯವಾಗದಿದ್ದರೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT