ಬೆಳಗಾವಿ: ‘ಮೈಸೂರಿನಲ್ಲಿ ಕಾಂಗ್ರೆಸ್ ಸೋತರೆ ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂಬ ಹೆದರಿಕೆ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ. ಹಾಗಾಗಿ ಇದು ನನ್ನ ಕೊನೇ ಚುನಾವಣೆ ಎನ್ನುತ್ತಿದ್ದಾರೆ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಟೀಕಿಸಿದರು.
‘ಕಳೆದ 10 ವರ್ಷಗಳಿಂದ ಅವರು ಇದೇ ಮಾತು ಹೇಳುತ್ತಿದ್ದಾರೆ. ಜನ ಅವರನ್ನು ನಂಬುವುದಿಲ್ಲ. ಈ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲುತ್ತೇವೆ. ಚುನಾವಣೆ ನಂತರದಲ್ಲಿ ಈ ಸರ್ಕಾರ ಪತನವಾಗಬಹುದು’ ಎಂದು ಅವರು ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ತಿಳಿಸಿದರು.
‘ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ, ರಾಜ್ಯದಲ್ಲಿನ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತವೆ’ ಎಂಬ ಚರ್ಚೆ ಕೇಳಿಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ‘ಅದು ಸುಳ್ಳು. ಬಿಜೆಪಿಯವರ ವಿರುದ್ಧ ಕಾಂಗ್ರೆಸ್ನವರು ಈ ರೀತಿಯ ಅಪಪ್ರಚಾರ ಮಾಡುತ್ತಲೇ ಇರುತ್ತಾರೆ’ ಎಂದರು.