ಕೆ.ಆರ್.ಪುರ: ‘ಭಾರತೀಯರಿಗೆ ವಿದೇಶದಲ್ಲೂ ಗೌರವ ತರುವ ಕೆಲಸ ಮಾಡಿದ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ‘ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದರು.
ವೈಟ್ಫೀಲ್ಡ್ನಲ್ಲಿ ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಮೋದಿ ಅವರು ದೇಶಕ್ಕಾಗಿ ಸಂಪೂರ್ಣ ಸಮಯ ನೀಡಿದ್ದಾರೆ. ದಿನದ 18 ಗಂಟೆಗಳ ಕಾಲ ದೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಹೂಡಿ ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ರೈಲು ನಿಲ್ದಾಣಗಳನ್ನು ಅಭಿವೃದ್ದಿಪಡಿಸಿದ್ದಾರೆ‘ ಎಂದರು.
‘ 5 ಕೆ.ಜಿ ಅಕ್ಕಿ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಅವರು. ಆದರೆ, ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರ ನೀಡಿದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ಇವರ ಮಾತಿಗೆ ಕಿವಿ ಕೊಡಬೇಡಿ‘ ಎಂದು ಅರವಿಂದ ಲಿಂಬಾವಳಿ, ‘ಬಡವರಿಗೆ ಕೋವಿಡ್ ಸಂದರ್ಭದಲ್ಲಿ ಆಹಾರ ಪದಾರ್ಥಗಳನ್ನು ನೀಡಿದ್ದೇವೆ. ಮೋದಿ ಅವರಿಂದ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ದೊರಕಿದೆ’ ಎಂದು ಹೇಳಿದರು.
ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಮಾತನಾಡಿ, ನರೇಂದ್ರ ಮೋದಿ ಅವರ ಸಾಧನೆ ಬಹಳಷ್ಟಿದೆ. ಬಡವರಿಗೆ ಉಚಿತವಾಗಿ ಬ್ಯಾಂಕ್ ಖಾತೆ ಮಾಡಿಸಿ ಸಾಲಸೌಲಭ್ಯ ಸಿಗುವ ರೀತಿ ಮಾಡಿದ್ದಾರೆ. 12 ಕೋಟಿ ಶೌಚಾಲಯ ನಿರ್ಮಿಸಿದ್ದಾರೆ. ಪ್ರತೀ ಹಳ್ಳಿಗೂ ವಿದ್ಯುತ್ ನೀಡಿದ್ದಾರೆ‘ ಎಂದು ಹೇಳಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಗೋಪಿನಾಥ್ ರೆಡ್ಡಿ, ಗುರುರಾಜ್, ಮಂಡಲ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಮಾಂತರ ಅಧ್ಯಕ್ಷ ನಟರಾಜ್, ಮುಖಂಡರಾದ ರಾಜೇಶ್, ಮಧುಗೌಡ ಪಾಲ್ಗೊಂಡಿದ್ದರು.