ಬೆಂಗಳೂರು: ‘ನಾನು ಕೇಂದ್ರ ಮಟ್ಟದಲ್ಲಿ ರಾಜಕಾರಣ ಮಾಡಿರುವ ನಾಯಕ. ಕಾಂಗ್ರೆಸ್ ಪಕ್ಷ ಕುಟುಂಬದ ಹಲವರಿಗೆ ಟಿಕೆಟ್ ನೀಡಿರುವುದರಿಂದ ಸಹಜವಾಗಿ ನಾನೂ, ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ದೊರೆಯುವ ಆಶಾಭಾವನೆಯಿದೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.‘
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನಾನು ನೀಡಿದ್ದೇನೆ’ ಎಂದರು.
‘ಕಾಂಗ್ರೆಸ್ ಪಕ್ಷದಲ್ಲಿ ಸರಿಸುಮಾರು 40 ವರ್ಷಗಳಿಂದ ಸತತವಾಗಿ ರಾಜಕೀಯ ಮಾಡಿದ್ದು, ಪಕ್ಷವು 10 ವರ್ಷ ಕೇಂದ್ರದಲ್ಲಿ ಸಚಿವನನ್ನಾಗಿ ಮಾಡಿದೆ. ಕಾಂಗ್ರೆಸ್ನ ಹೈಕಮಾಂಡ್ ನೀಡುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧನಾಗಿ ಕಾರ್ಯನಿರ್ವಹಿಸುತ್ತೇವೆ. ನಿನ್ನೆ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ. ಈ ರಾಜೀನಾಮೆ ಎಂಬುದು ನಾಟಕವಾಗಿದೆ. ಯಾರೂ ರಾಜೀನಾಮೆ ಕೊಡುವುದಿಲ್ಲ’ ಎಂದರು.
‘ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ ಪಕ್ಷದ್ದಾಗಿರಬೇಕೇ ಹೊರತು, ವ್ಯಕ್ತಿ ಪ್ರತಿಷ್ಠೆಯಿಂದ ಕೂಡಿರಬಾರದು. ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಹೈಕಮಾಂಡ್ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಅಧ್ಯ ಕರ್ತವ್ಯವಾಗಿದೆ’ ಎಂದರು.
‘ಕಾಂಗ್ರೆಸ್ ಪಕ್ಷ ಒಂದು ಕುಟುಂಬವಿದ್ದಂತೆ. ಈ ಜಗಳ ಹಾಗೂ ಮನಸ್ತಾಪಗಳನ್ನು ನಮ್ಮ ಹಂತದಲ್ಲಿಯೇ ಬಗೆಹರಿಸಿಕೊಂಡು ಮುನ್ನಡೆಯಬೇಕಾಗಿದೆ. ಈ ರೀತಿಯಲ್ಲಿ ರಾಜೀನಾಮೆ ನೀಡುವ ಹಂತಕ್ಕೆ ಯಾವ ಕಾರಣದಿಂದ ಹೋದರು ಎಂಬುವುದು ಕುತೂಹಲಕರವಾಗಿದೆ’ ಎಂದರು.