ಬೆಂಗಳೂರು: ‘ಕೋಲಾರ ಟಿಕೆಟ್ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವೆಂದು ಎಲ್ಲ ಶಾಸಕರು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆ ಯಶಸ್ವಿಯಾಗಿದೆ’ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು.
ಕೋಲಾರ ಟಿಕೆಟ್ ಗೊಂದಲದ ಕುರಿತು ಮುಖ್ಯಮಂತ್ರಿ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಸಂಧಾನ ಸಭೆಯ ಬಳಿಕ ಮಾತನಾಡಿದ ಅವರು, ‘ಟಿಕೆಟ್ ಯಾರಿಗೆ ನೀಡಿದರೂ ಬದ್ಧರಾಗಿರುತ್ತೇವೆಂದು ಶಾಸಕರು ಹೇಳಿದ್ದಾರೆ’ ಎಂದರು.
ಸಭೆಯಲ್ಲಿ ಭಾಗವಹಿಸಿದ ಸಚಿವ ಡಾ. ಎಂಸಿ. ಸುಧಾಕರ್, ‘ಸಭೆಯಲ್ಲಿ ನಮ್ಮ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಏನೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸುವುದಾಗಿ ತಿಳಿಸಿದ್ದಾರೆ. ಸಿಎಂ, ಡಿಸಿಎಂ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ. ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಬಿಡುವುದಿಲ್ಲ. ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಅವರು ಹೇಳಿದಂತೆ ನಡೆದುಕೊಳ್ಳುತ್ತೇವೆ. ರಾಜೀನಾಮೆ ನೀಡಲು ಮುದಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದರು.
‘ನಮ್ಮ ವಿಚಾರವನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದೇವೆ. ನಮ್ಮ ವಿಚಾರಗಳನ್ನು ಹೈಕಮಾಂಡ್ಗೆ ತಿಳಿಸುತ್ತೇವೆ ಎಂದಿದ್ದಾರೆ. ಅದಕ್ಕೆ ಬದ್ಧರಾಗಿರುತ್ತೇವೆ ಎಂದೂ ಮಾತು ನೀಡಿದ್ದೇವೆ’ ಎಂದರು.
ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ಇದ್ದರು.
ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಮಾಜಿ ಸಭಾಧ್ಯಕ್ಷ ರಮೇಶ್ಕುಮಾರ್ ಬಣ, ಈ ಕ್ಷೇತ್ರದಲ್ಲಿ ಬಲಗೈ ಸಮುದಾಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದೆ. ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡುವುದನ್ನು ವಿರೋಧಿಸಿ ಸಚಿವ ಎಂ.ಸಿ. ಸುಧಾಕರ್ ಸೇರಿ ಮೂವರು ಶಾಸಕರು ಮತ್ತು ಇಬ್ಬರು ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದರಿಂದ ಕೋಲಾರದಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ.