ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ, ನಾನು ಪ್ರಬಲ ಮುಖ್ಯಮಂತ್ರಿ ಎಂದು ಕೊಚ್ಚಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ಗರ್ವ ಇದೇ ಲೋಕಸಭಾ ಚುನಾವಣೆಯಲ್ಲಿ ಭಂಗ ಆಗಬೇಕು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಶುಕ್ರವಾರ ನಡೆದ ಬಿಜೆಪಿ–ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಮೈಸೂರು–ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ತವರಿನಲ್ಲೇ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಶಾಸಕ ಜಿ.ಟಿ. ದೇವೇಗೌಡರಿಗೆ ಸೂಚಿಸಿದರು.
‘ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಎಂದರೆ, ಇಲ್ಲ ಎಂದರು. ಈಗ ಸಿದ್ದರಾಮಯ್ಯ ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ. ಎಂಥಾ ಜನ ಇವರು. ಜೆಡಿಎಸ್ ಎಲ್ಲಿದೆ ಎಂಬ ಅಹಂಕಾರದ ಮಾತು ಹೇಳುತ್ತಾರೆ. ನನ್ನ ತಲೆ ವಿಶ್ವಕೋಶ. ಯಾವಾಗ ಏನೆಲ್ಲ ನಡೆದಿದೆ ಎನ್ನುವುದು ಗೊತ್ತಿದೆ. ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಅಧಿಕಾರದ ಮದ ಇಳಿಸುವ ಸಾಮರ್ಥ್ಯ 91 ವರ್ಷದ ಈ ದೇವೇಗೌಡನಿಗೆ ಇದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.