ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಸಮರ್ಥ ಸಂಪುಟ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ: ವಿ.ಸುನಿಲ್‌ ಕುಮಾರ್‌

Published 15 ಮೇ 2024, 11:30 IST
Last Updated 15 ಮೇ 2024, 11:30 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದು, ಈವರೆಗೆ ಒಂದೇ ಒಂದು ಅಭಿವೃದ್ಧಿ ಕೆಲಸವೂ ನಡೆದಿಲ್ಲ. ಅನುದಾನಗಳು ಬಿಡುಗಡೆ ಆಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ಪಾವತಿ ಆಗುತ್ತಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನಿಲ್‌ ಕುಮಾರ್‌ ಹೇಳಿದರು.

ಅಸಮರ್ಥ ಸಂಪುಟ ಮತ್ತು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ವ್ಯಾಖ್ಯಾನಿಸಿದರು.

ವಿಧಾನಸಭಾ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ ಎಂದು ಟೀಕಿಸಿದರು.

ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ನುಡಿದರು.

ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ ಎಂದು ವಿವರಿಸಿದರು.

ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ:

ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದೆ ಸುನಿಲ್‌ ಕುಮಾರ್ ತಿಳಿಸಿದರು.

ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಅವರು ಟೀಕಿಸಿದರು.

ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, ₹496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಕೃಷಿ- ಸಹಕಾರಿ ಸಚಿವರ ಅಸಾಮರ್ಥ್ಯವೇ ಕಾರಣ ಎಂದು ಅವರು ವಿಶ್ಲೇಷಿಸಿದರು.

ಈ ಸರಕಾರ ಬಂದ ಬಳಿಕ ಕರ್ನಾಟಕದ ಒಬ್ಬನೇ ಒಬ್ಬ ರೈತನಿಗೆ ಹೊಸ ಪಂಪ್‍ಸೆಟ್ ಸಂಪರ್ಕ ಸಿಗಲಿಲ್ಲ. ರೈತರು ಹಣ ಕಟ್ಟಿದರೂ ಹೊಸ ಸಂಪರ್ಕ ಸಿಕ್ಕಿಲ್ಲ 24 ಗಂಟೆ ವಿದ್ಯುತ್ ನಿರಂತರ ಬಿಡಿ; ಗ್ರಾಮೀಣ ಪ್ರದೇಶದಲ್ಲಿ 10- 12 ಗಂಟೆ ವಿದ್ಯುತ್ ಕೊಡಲಾಗದ ಸ್ಥಿತಿ ಇದೆ ಎಂದರು.

ಶಿಕ್ಷಣದ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗ್ರೇಸ್ ಮಾರ್ಕ್ ಕೊಟ್ಟಿದ್ದನ್ನು ಗಮನಿಸಿದರೆ ಶಿಕ್ಷಣ ಇಲಾಖೆ ಎಷ್ಟು ಅಸಮರ್ಥ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಂಗನವಾಡಿಯವರಿಗೆ ಗೌರವಧನ ಹೆಚ್ಚಿಸಿಲ್ಲ; ಅಂಗನವಾಡಿಗಳ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಾಸವಾಗಿದೆ. ಅಲ್ಲೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಕಾರ್ಯವೈಖರಿಗೆ ಕೈಗನ್ನಡಿ ಎಂದು ದೂರಿದರು.

ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಲೆ ಏರಿಕೆ ಆಗುತ್ತಿದೆ. ಇದಕ್ಕೆ ಪಿಕ್‌ಪಾಕೆಟ್‌ ಕಾಂಗ್ರೆಸ್ ಸರ್ಕಾರವೇ ಕಾರಣ. ಅದನ್ನು ಸರ್ಕಾರ ಸರಿ ಮಾಡಿಕೊಂಡಿಲ್ಲ. ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬಗಳು ಮತ್ತು ಇವೆಂಟ್‌ ಮ್ಯಾನೇಜ್‌ಮೆಂಟಿನ ಸದಸ್ಯರು ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಸರ್ಕಾರ ನಡೆಯುತ್ತಿದೆ ಎಂದರು.

ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್‍ನಲ್ಲಿ ನಡೆಯುವಂತೆ ಭಾಸವಾಗುತ್ತಿದೆ. ಒಂದು ವರ್ಷದ ಈ ಸರಕಾರದ ಅವ್ಯವಸ್ಥೆ ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಈ ಅಸಮರ್ಥ ಸರಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT