ಹುಬ್ಬಳ್ಳಿ: ‘ಪ್ರಜ್ವಲ್ ರೇವಣ್ಣ ಪ್ರಕರಣ ಮೊದಲೇ ಗೊತ್ತಿದ್ದರೂ ಜೆಡಿಎಸ್ ಜತೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದೀರಿ?, ಅವರು ವಿದೇಶಕ್ಕೆ ಪರಾರಿಯಾಗುವುದನ್ನು ಏಕೆ ತಡೆಯಲಿಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.
‘ಪೆನ್ಡ್ರೈವ್ ಕುರಿತು ಹಾಸನದ ಬಿಜೆಪಿ ಮುಖಂಡರೊಬ್ಬರು ಕಳೆದ ಡಿಸೆಂಬರ್ನಲ್ಲಿಯೇ ಅಮಿತ್ ಶಾ, ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದರು. ಆದರೂ ಏಕೆ ಅವರಿಗೆ ಟಿಕೆಟ್ ನೀಡಲಾಯಿತು?, ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಜ್ವಲ್ ಪರ ಪ್ರಚಾರ ನಡೆಸಿ ಹೋಗಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗುವುದನ್ನು ತಡೆಯದಂತೆ ಜೆಡಿಎಸ್ ಮುಖಂಡರ ಒತ್ತಡ ಇತ್ತೇ?. ಈ ವಿಷಯದಲ್ಲಿ ಬಿಜೆಪಿಯವರ ಡೋಂಗಿತನ ಜಗಜ್ಜಾಹೀರಾಗಿದೆ’ ಎಂದರು.
‘ಹಾಸನದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಪೆನ್ಡ್ರೈನ್ನಲ್ಲಿರುವುದು ನಕಲಿ ವಿಡಿಯೊ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡುತ್ತಾರೆ.ಈ ಮೂಲಕ ಬಿಜೆಪಿಯವರು ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದರು.
‘ಪ್ರಜ್ವಲ್ ಪ್ರಕರಣವನ್ನು ಸಮರ್ಥಿಸಿಕೊಳ್ಳುವುದು ಬಿಟ್ಟು ಅಮಿತ್ ಶಾ, ಎಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ ಜೋಶಿ ಅವರು ಆತನನ್ನು ವಿದೇಶದಿಂದ ಕರೆಸಿ ಎಸ್ಐಟಿ ಎದುರು ಹಾಜರುಪಡಿಸಬೇಕು. ಇಲ್ಲದಿದ್ದರೆ ನಿಮಗೆ ಮಾತನಾಡುವ ನೈತಿಕತೆ ಇರುವುದಿಲ್ಲ’ ಎಂದು ಹೇಳಿದರು.
‘ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಅಬ್ಬರಿಸುವ ಬಿಜೆಪಿಯವರು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಏಕೆ ತುಟಿ ಬಿಚ್ಚುತ್ತಿಲ್ಲ. ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ. ಆದರೆ, ಬಿಜೆಪಿಯವರು ರಣಹದ್ದುಗಳ ರೀತಿಯಲ್ಲಿ ಈ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.
‘ಬೇಟಿ ಬಚಾವೊ ಬೇಟಿ ಪಢಾವೊ ಎಂದು ಹೇಳುವ ಪ್ರಧಾನಿ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ದೌರ್ಜನ್ಯ ನಡೆಸಿದ ಬ್ರಿಜ್ ಭೂಷಣ್ ಸಿಂಗ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ’ ಎಂದು ಹರಿಹಾಯ್ದರು.
‘ಪ್ರಲ್ಹಾದ ಜೋಶಿ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ನೇಹಾ ಅವರ ಮನೆಗೆ ಭೇಟಿ ನೀಡುತ್ತಾರೆ. ಬೇರೆ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಾರೆ. ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಮನೆಗಳಿಗೆ ಅಮಿತ್ ಶಾ ಭೇಟಿ ನೀಡುತ್ತಾರೆಯೇ’ ಎಂದು ಪ್ರಶ್ನಿಸಿದರು.
‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಹೇಳಿಕೊಳ್ಳುವಂತ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಹೀಗಾಗಿ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ, ಅಮಿತ್ ಶಾ ಜನರಿಗೆ ಸುಳ್ಳು ಹೇಳುವುದು ನಿಲ್ಲಿಸಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.