ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಗಿದಿರುವುದರಿಂದ ನೀತಿ ಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿ ಕಾರಿಗಳನ್ನು ಹೊರತುಪಡಿಸಿ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಯಾವುದೇ ಅಡ್ಡಿ ಇಲ್ಲ ಎಂದು ಆಯೋಗ ಹೇಳಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಅವರು ಕೋರಿದ್ದ ಸ್ಪಷ್ಟನೆಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಉತ್ತರ ನೀಡಿದ್ದು, ಸಹಜ ರೀತಿಯಲ್ಲಿ ಸರ್ಕಾರ ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದೆ.
ಹೊಸ ಯೋಜನೆ ಪ್ರಕಟಿಸಬಹುದು, ಟೆಂಡರ್ಗಳನ್ನು ಕರೆಯಬಹುದು, ಹೊಸ ನೇಮಕಾತಿ, ಸಂದರ್ಶನ ನಡೆಸಬಹುದು ಎಂದು ಸ್ಪಷ್ಟನೆ ನೀಡಿದೆ.
ಚುನಾವಣಾ ನೀತಿ ಸಂಹಿತೆ ರದ್ದಾಗಿರುವುದರಿಂದ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗುವ ಸೂಚನೆ ಇದೆ.