2019ರ ಚುನಾವಣೆಯಲ್ಲಿ ಡಿಎಂಕೆ ಅಭ್ಯರ್ಥಿ ಗೆದ್ದಿದ್ದ ತಿರುನೆಲ್ವೇಲಿ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್, ರಾಬರ್ಟ್ ಬ್ರೂಸ್ ಅವರನ್ನು ಅಖಾಡಕ್ಕಿಳಿಸಿದೆ. ಡಿಎಂಕೆಯು ‘ಇಂಡಿಯಾ’ ಒಕ್ಕೂಟದಲ್ಲಿರುವುದರಿಂದ ರಾಬರ್ಟ್ ಅವರು ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸದಲ್ಲಿದೆ ಕಾಂಗ್ರೆಸ್. ವೃತ್ತಿಯಲ್ಲಿ ವಕೀಲರಾಗಿರುವ ರಾಬರ್ಟ್ ಅವರು, 2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ವೇಳೆ ಎಐಸಿಸಿ ವೀಕ್ಷಕರಾಗಿಯೂ ಕಾರ್ಯನಿರ್ವಹಿಸಿದ್ದರು. ಹಿಂದಿನ ಚುನಾವಣೆಗಳಲ್ಲಿ ರಾಬರ್ಟ್ ಅವರು ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ವ್ಯಕ್ತಪಡಿಸಿದ್ದರು. ಆದರೆ ಪಕ್ಷವು ಅವರನ್ನು ಸ್ಪರ್ಧೆಗಿಳಿಸಿರಲಿಲ್ಲ. ಈ ಬಾರಿ ತಿರುನೆಲ್ವೇಲಿಯಿಂದ ಅದೃಷ್ಟ ಪರೀಕ್ಷೆಗಿಳಿಯುವ ಅವಕಾಶ ಒದಗಿ ಬಂದಿದೆ. ದೀರ್ಘ ಕಾಲ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ರಾಬರ್ಟ್ ಅವರು ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ.