ಮಂಡ್ಯ: ‘ರಾಜ್ಯ ಸರ್ಕಾರ ನನ್ನ ವಿರುದ್ಧ ಸಿಬಿಐ, ಸಿಐಡಿ ತನಿಖೆ ಅಸ್ತ್ರ ಬಳಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದೆ. ಆ ರೀತಿಯಾದರೆ ಮುಂದಿನ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸುತ್ತೇನೆ’ ಎಂದು ಸಂಸದ ಸಿ.ಎಸ್.ಪುಟ್ಟರಾಜು ಹೇಳಿದರು.
ಪಾಂಡವಪುರ ತಾಲ್ಲೂಕು, ಚಿನಕುರಳಿ ಗ್ರಾಮದಲ್ಲಿ ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
‘ವಿರೋಧಿಗಳು ಏನೇ ಪಿತೂರಿ ನಡೆಸಿದರೂ ನನ್ನನ್ನು ರಾಜಕೀಯವಾಗಿ ಅಲುಗಾಡಿಸಲು ಸಾಧ್ಯವಿಲ್ಲ.
ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ನನ್ನ ವಿರುದ್ಧ ಸಿಐಡಿ ತನಿಖೆ ನಡೆಸಲಾಗುತ್ತಿದೆ. ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಲಾಗುತ್ತಿದೆ. ನಾನು ಈ ಎಲ್ಲಾ ತನಿಖೆಗಳಿಗೂ ಸಹಕಾರ ನೀಡುತ್ತೇನೆ. ಆದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಜೈಲಿಗೆ ಕಳುಹಿಸಿದರೆ ಅಲ್ಲಿಂದಲೇ ನಾಮಪತ್ರ ಸಲ್ಲಿಸುತ್ತೇನೆ. ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ’ ಎಂದು ತಿಳಿಸಿದರು.