ನವದೆಹಲಿ: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಧರ್ಮಾಧಾರಿತ ಮತ ಯಾಚನೆಯಲ್ಲಿ ತೊಡಗಿದೆ ಎಂದು ದೂರಿ, ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷವು ಏಪ್ರಿಲ್ 27ರಂದು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ, ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದವರಿಗೆ ವಿಶಿಷ್ಟ ಸೌಲಭ್ಯ ನೀಡುವುದಾಗಿ ಘೋಷಿಸಿದೆ. ಕೂಡಲೇ ಪ್ರಣಾಳಿಕೆಯಲ್ಲಿನ ಈ ಅಂಶವನ್ನು ತೆಗೆದುಹಾಕಲು ಪಕ್ಷಕ್ಕೆ ಸೂಚಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಈ ಮೂಲಕ ಕಾಂಗ್ರೆಸ್ ಪಕ್ಷವು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (3) ಅನ್ನು ಉಲ್ಲಂಘಿಸಿದೆ ಎಂದು ದೂರಿರುವ ಪ್ರಮೋದ್ ಮುತಾಲಿಕ್, ಈ ಕುರಿತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.