ಕುಣಿಗಲ್: ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ದಿವಂಗತ ಜಿಲ್ಲಾಧಿಕಾರಿ ಡಿ.ಕೆ.ರವಿ ಅವರ ತಾಯಿ, ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದ ಗೌರಮ್ಮ ತಿಳಿಸಿದರು.
ನಾಮಪತ್ರ ಸಲ್ಲಿಕೆಗೆ ಅಗತ್ಯ ದಾಖಲೆ ಪಡೆಯಲು ತಾಲ್ಲೂಕು ಕಚೇರಿಗೆ ಬುಧವಾರ ಬಂದಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈಗಾಗಲೇ ಕೋಲಾರದ 225 ಹಳ್ಳಿಗಳಲ್ಲಿ ಸಂಚರಿಸಿ ಜನಾಭಿಪ್ರಾಯ ಸಂಗ್ರಹಿಸಲಾಗಿದೆ. ಮತದಾರರು ಪೂರಕವಾಗಿ ಸ್ಪಂದಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೆ. ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡ ಅವರ ಜತೆ ಚರ್ಚಿಸಿದ್ದೇನೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.
ಕೆಲ ರಾಜಕೀಯ ಪಕ್ಷದವರು ಪ್ರಚಾರಕ್ಕೆ ಕರೆದಿದ್ದಾರೆ. ಆದರೆ ಯಾರೂ ಟಿಕೆಟ್ ನೀಡುವ ಭರವಸೆ ಕೊಟ್ಟಿಲ್ಲ. ಆದ್ದರಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಮಾಹಿತಿ ನೀಡಿದರು.