ಯಲಬುರ್ಗಾ (ಕೊಪ್ಪಳ ಜಿಲ್ಲೆ): 'ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಎಚ್.ಎಂ.ರೇವಣ್ಣ ಆದರೂ ನಿಲ್ಲಲಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯಾದರೂ ನಿಲ್ಲಲಿ, ನನಗೆ ಏನೂ ತೊಂದರೆ ಇಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
‘ನಾನು ರಾಜ್ಯದ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೊರಟಿದ್ದೇನೆ. ಯಾರ ಬಗೆಗೂ ವೈಯಕ್ತಿಕವಾಗಿ ಚರ್ಚಿಸುವುದಿಲ್ಲ. ಯಾವ ಪಕ್ಷಗಳ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಚುನಾವಣೆಯಲ್ಲಿ ಜೆಡಿಎಸ್ 113ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ’ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.
‘ಬಿ.ಎಸ್.ಯಡಿಯೂರಪ್ಪ ಅವರಿಗೆ ರೈತರ ಮೇಲೆ ಈಗ ಮಮಕಾರ ಬಂದಿದೆ. ಅವರು ಗಂಗಾವತಿಯಲ್ಲಿ ಭತ್ತದ ಗದ್ದೆಯಲ್ಲಿ ನಿಂತು ಸರ್ಕಾರ ಸತ್ತು ಹೋಗಿದೆಯಾ ಎಂದು ಪ್ರಶ್ನಿಸುತ್ತಾರೆ. ನಾನು ಸುಮಾರು ಒಂದೂವರೆ ತಿಂಗಳ ಹಿಂದೆ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ, ಬೇಸಿಗೆ ವೇಳೆ ಭತ್ತದ ಬೆಳೆಗೆ ತೊಂದರೆ ಆಗದಂತೆ ನೀರು ಪೂರೈಕೆ ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದೆ’ ಎಂದರು.