ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಬಂದ್‌ಗೆ ಸುದೀಪ್ ಬೆಂಬಲ: ಬರ ಪರಿಸ್ಥಿತಿ ಮನವರಿಕೆ ಮಾಡಲಿ ಎಂದ ನಟ

ಚಿತ್ರಮಂದಿರಗಳಲ್ಲಿ ಮೊದಲೆರಡು ಪ್ರದರ್ಶನಗಳು ರದ್ದು
Published 26 ಸೆಪ್ಟೆಂಬರ್ 2023, 6:05 IST
Last Updated 26 ಸೆಪ್ಟೆಂಬರ್ 2023, 6:05 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ ಚಿತ್ರಮಂದಿರಗಳು ಭಾಗಶಃ ಸ್ತಬ್ಧವಾಗಿದೆ. ಜನರ ಓಡಾಟ ವಿರಳವಾಗಿರುವ ಕಾರಣ ನಗರದ ಹಲವು ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳಲ್ಲಿ ಮೊದಲೆರಡು ಪ್ರದರ್ಶನಗಳನ್ನು ರದ್ದುಪಡಿಸಲಾಗಿದೆ. 

ಇದೇ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ನಟ ಸುದೀಪ್‌, ‘ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ ಎಂದಿದ್ದಾರೆ. ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದಾರೆ ಸುದೀಪ್‌.  

‘ಮುಂಗಾರು ಮಳೆಯ ಅಭಾವದಿಂದ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಜ್ಞರು ಕೂಡಲೇ ಕರ್ನಾಟಕದ ಬರ ಪರಿಸ್ಥಿತಿಯನ್ನು ಕಾವೇರಿ ನ್ಯಾಯಾಧಿಕರಣ ಮತ್ತು ಕೇಂದ್ರ ಸರ್ಕಾರಕ್ಕೆ ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಸುದೀಪ್‌ ಅವರು ಆಗ್ರಹಿಸಿದ್ದಾರೆ. 

‘ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ-ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದು ಹೋರಾಟಕ್ಕೆ ಜಯವಾಗಲಿ’ ಎಂದಿದ್ದಾರೆ ಸುದೀಪ್‌. 

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿಯಲಿ ಎಂದು ಅವರು ಆಶಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT