‘ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್ ತಿಳಿಸಿದ್ದಾರೆ.