ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗ್ಗೇಶ್‌ ನಿರ್ಮಾಣದ ‘ವಂದೇ ಮಾತರಂ’ ಶ್ಲಾಘಿಸಿದ ಪ್ರಧಾನಿ ಮೋದಿ

Last Updated 16 ಆಗಸ್ಟ್ 2022, 10:19 IST
ಅಕ್ಷರ ಗಾತ್ರ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್‌ ಅವರು ನಿರ್ಮಾಣ ಮಾಡಿದ, ನಿರ್ದೇಶಕ ಸಂತೋಷ್‌ ಆನಂದರಾಮ್‌ ನಿರ್ದೇಶನದ ‘ವಂದೇ ಮಾತರಂ’ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಡಿಯೊವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಮೆಚ್ಚಿಕೊಂಡಿದ್ದಾರೆ.

ಈ ವಿಡಿಯೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್‌ಗೆ ‘ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗೈದ ಕರ್ನಾಟಕದ ಅಪ್ರತಿಮ ಸಾಧಕರ ಅತ್ಯುತ್ತಮ ಪ್ರಯತ್ನ’ ಎಂದು ಕನ್ನಡದಲ್ಲಿಯೇ ಶೀರ್ಷಿಕೆ ನೀಡಿ ರಿಟ್ವೀಟ್‌ ಮಾಡಿದ್ದಾರೆ ಮೋದಿ.

ಈ ಹಾಡಿಗೆ ಪ್ರವೀಣ್ ಡಿ. ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಈ ಹಾಡಿಗಿದೆ. ನಟರಾದ ಸುದೀಪ್‌, ಶಿವರಾಜಕುಮಾರ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್, ಅನಂತನಾಗ್,
ಅರ್ಜುನ್ ಸರ್ಜಾ, ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಸಾಹಿತಿ ಎಸ್.ಎಲ್. ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿದ್ದಾರೆ.

ವಿಡಿಯೊ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜಗ್ಗೇಶ್‌, ‘ನನಗೆ ‘ಮಿಲೇ ಸುರ್ ಮೇರಾ ತುಮಾರ’ ಹಾಡೆಂದರೆ ಚಿಕ್ಕವಯಸ್ಸಿನಲ್ಲೇ ಬಲು ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕೆಂಬ ಆಸೆಯಿತ್ತು. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದೆ’ ಎಂದಿದ್ದಾರೆ.

‘ವಂದೇ ಮಾತರಂ ಎಂದರೆ ಜಾತಿ, ಮತ, ಧರ್ಮ ಎಲ್ಲವನ್ನೂ ದಾಟಿ ನಾವೆಲ್ಲರೂ ಭಾರತಮಾತೆಯ ಮಕ್ಕಳು ಎನ್ನುವ ಸಾರಾಂಶ. ಭಾರತವನ್ನು ಯಾವ ರೀತಿಯಲ್ಲಿ ವಿವರಿಸಬಹುದು ಎಂದು ಹೋದಾಗ, ಅಲ್ಲಿ ನಾವು ಗೋಮಾತೆಯನ್ನು ತಾಯಿಯ ರೀತಿ ಪೂಜಿಸುತ್ತೇವೆ. ಆ ಪಾತ್ರದಲ್ಲಿ ಶಿವರಾಜ್‌ಕುಮಾರ್‌ ಅವರು ಅಭಿನಯಿಸಿದ್ದಾರೆ. ನಾಲ್ಕೂವರೆ ದಿನದಲ್ಲಿ ಈ ಹಾಡಿನ ಚಿತ್ರೀಕರಣ ನಡೆಸಿದ್ದೆವು’ ಎಂದು ನೆನಪಿಸಿಕೊಂಡರು ಸಂತೋಷ್ ಆನಂದರಾಮ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT