ಮೈಸೂರು: ಚಲನಚಿತ್ರ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮದುವೆ ನಗರದ ಊಟಿ ರಸ್ತೆಯಲ್ಲಿರುವ ಸಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗುರುವಾರ ಅದ್ಧೂರಿಯಾಗಿ ನೆರವೇರಿತು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿಗೆ ಬಂಧುಗಳು, ಕಲಾವಿದರು, ರಾಜಕಾರಣಿಗಳು ಶುಭ ಹಾರೈಸಿದರು.
ವಿಶೇಷವಾಗಿ ಸಿದ್ಧಪಡಿಸಿದ್ದ ಮಂಟಪದಲ್ಲಿ, ಬೆಳಿಗ್ಗೆ 10.30ರಿಂದ 11.55ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನವ ದಂಪತಿಗೆ ಶುಭ ಕೋರಿದರು. ನಟರಾದ ಧನಂಜಯ್, ಕೃಷ್ಣ, ಮಾಸ್ಟರ್ ಆನಂದ್, ನಟಿ ಅಮೃತಾ ಅಯ್ಯಂಗಾರ್, ಸಂಗೀತ ನಿರ್ದೇಶಕ ಗುರುಕಿರಣ್ ಮೊದಲಾದವರು ಶುಭಾಶಯ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ನಿರ್ಮಾಪಕ ಸಂದೇಶ್ ನಾಗರಾಜ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್. ಶ್ರೀವತ್ಸ, ‘ಮುಡಾ’ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಭಾಗವಹಿಸಿದ್ದರು.