ಉಪೇಂದ್ರ ನಟನೆಯ ‘ಬುದ್ಧಿವಂತ–2’ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಹಿಂದೆ ಸೆ.15ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿತ್ತು.
‘ಸಿನಿಮಾ ಬಿಡುಗಡೆ ದಿನಾಂಕವನ್ನು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದೆ. ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುತ್ತದೆ’ ಎಂದಿದ್ದಾರೆ ಉಪೇಂದ್ರ.
ಸೆ.18ರಂದು ಉಪೇಂದ್ರ ಅವರ ಜನ್ಮದಿನವಿದೆ. ಈ ಸಂದರ್ಭದಲ್ಲೇ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಲ್ ಮೊಂತೆರೋ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್. ನವೀನ್ ಕುಮಾರ್ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.