‘ಲೂಸ್ ಮಾದ’ ಯೋಗೀಶ್ ನಾಯಕರಾಗಿ ನಟಿಸಿರುವ ‘ಲಂಕೆ’ ಚಿತ್ರದ ‘ನಯನಕ್ಕೆ ನಯನ ಸೇರೋ ಕ್ಷಣ’ ಎಂಬ ಹಾಡು ಆನಂದ್ ಆಡಿಯೊ ಮೂಲಕ ಬಿಡುಗಡೆಯಾಗಿದೆ.
ನಿರ್ದೇಶಕ ರಾಮಪ್ರಸಾದ್ ಎಂ.ಡಿ. ಮಾತನಾಡಿ, ‘ಸ್ವಲ್ಪ ದುಃಖ ಹಾಗೂ ಹೆಚ್ಚಿನ ಸಂತೋಷವನ್ನು ಹಾಡಿನ ಮೂಲಕ ಹೇಳಬೇಕೆಂದುಕೊಂಡೆ. ಗೀತರಚನೆಕಾರ ಗೌಸ್ ಪೀರ್ ಈ ಸುಂದರ ಗೀತೆ ಬರೆದುಕೊಟ್ಟರು. ಅಷ್ಟೇ ಮಧುರವಾಗಿ ಕಾರ್ತಿಕ್ ಶರ್ಮ ಈ ಹಾಡಿಗೆ ಸಂಗೀತ ನೀಡಿದ್ದಾರೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಯೋಗಿ ಹಾಗೂ ಕೃಷಿ ತಾಪಂಡ ಅದ್ಭುತವಾಗಿ ನಟಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದಂದು ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ’ ಎಂದು ಹೇಳಿದರು.
ನಾಯಕ ಯೋಗೀಶ್ ಸಹ ಈ ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಕಾರ್ತಿಕ್ ಶರ್ಮ ಹಾಗೂ ನೃತ್ಯ ನಿರ್ದೇಶಕರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ತುಂಬಾ ದಿನಗಳ ನಂತರ ಎಲ್ಲರನ್ನೂ ನೋಡಿ ಸಂತಸವಾಗುತ್ತಿದೆ ಎಂದು ಮಾತು ಆರಂಭಿಸಿದ, ನಾಯಕಿ ಕೃಷಿ ತಾಪಂಡ ಈ ಹಾಡು ಹಾಗೂ ಚಿತ್ರದ ಬಗ್ಗೆ ತಮ್ಮ ಅನುಭವದ ಮಾತುಗಳನ್ನಾಡಿದರು.
ಚಿತ್ರದ ನಾಲ್ಕು ಹಾಡುಗಳು ಬೇರೆ ಬೇರೆ ಶೈಲಿಯಲ್ಲಿವೆ. ಈ ಹಾಡು ಸೂಫಿ ಹಾಗೂ ಖವಾಲಿ ಶೈಲಿಯಲ್ಲಿದೆ. ಗೌಸ್ಪೀರ್ ಅವರ ಸಾಹಿತ್ಯ ಸೊಗಸಾಗಿದೆ. ಈ ಹಾಡನ್ನು ಧನುಷ್ ಜಗದೀಶ್ ಹಾಗೂ ರಕ್ಷಿತಾ ಸುರೇಶ್ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಕಾರ್ತಿಕ ಶರ್ಮ ಮಾಹಿತಿ ನೀಡಿದರು.
ಪಟೇಲ್ ಶ್ರೀನಿವಾಸ್, ಸುರೇಖಾ ರಾಮ್ ಪ್ರಸಾದ್ ಚಿತ್ರದ ನಿರ್ಮಾಪಕರು. ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.