ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನಗಳ ಕಾಲ ಶೋಕಾಚರಣೆಗೆ ನಿರ್ಧರಿಸಲಾಗಿದೆ.
ಈ ಕುರಿತು ಭಾನುವಾರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಕಚೇರಿಯು, ‘ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ’ ಎಂದು ತಿಳಿಸಿದೆ.
‘ಇಂದು ಮತ್ತು ನಾಳೆ ರಾಜ್ಯದಲ್ಲಿ ಶೋಕಾಚರಣೆ ಇರಲಿದೆ. ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ರಾಜ್ಯ ಸರ್ಕಾರ ಸೂಚಿಸಿದೆ’ ಎಂದು ಸಿಎಂ ಕಚೇರಿ ಹೇಳಿದೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್ ಇಂದು ಬೆಳಿಗ್ಗೆ ನಿಧನರಾದರು. ಸಂಜೆ 6:30ಕ್ಕೆ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ.