ಪರ್ಪಲ್ ರಾಕ್ ಸಂಸ್ಥೆಯ ವತಿಯಿಂದ ನಿರ್ಮಾಣವಾಗುತ್ತಿರುವ ಚಿತ್ರ ‘ಲೈನ್ ಮ್ಯಾನ್’. ಈ ಚಿತ್ರಕ್ಕೆಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಮುಹೂರ್ತ ನೆರವೇರಿತು.
‘ಭಿನ್ನ’ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ ‘ಡಿಯರ್ ಸತ್ಯ’ ಚಿತ್ರ ಸಹ ನಿರ್ಮಾಣವಾಗಿತ್ತು. ಈ ಚಿತ್ರವು ಸಂಸ್ಥೆಯ ಮೂರನೆಯ ನಿರ್ಮಾಣ ‘ಲೈನ್ ಮ್ಯಾನ್’ ಚಿತ್ರ ಆರಂಭವಾಗಿದೆ.
ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರಘು ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ.
ತ್ರಿಗುಣ್ ಈ ಚಿತ್ರದ ನಾಯಕ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಹಳ್ಳಿ ಕಡೆ ದಿನಾ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ಸಂಬಂಧಿಸಿ ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ ‘ಲೈನ್ ಮ್ಯಾನ್’ ಪಾತ್ರದಲ್ಲಿದ್ದಾರೆ.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ. , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ.