ನವದೆಹಲಿ: ವಂಚನೆ ಆರೋಪ ಎದುರಿಸುತ್ತಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಹಾಗೂ ಇತರರಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಜಾರಿ ನಿರ್ದೇಶನಾಲಯದ(ಇ.ಡಿ) ವಿಚಾರಣೆಗೆ ಹಾಜರಾಗಿದ್ದಾರೆ.
ಇ.ಡಿ ವಿಚಾರಣೆ ಹಿನ್ನೆಲೆಯಲ್ಲಿ ಜಾಕ್ವೆಲಿನ್, ಅನೂಪ್ ಭಂಡಾರಿ ನಿರ್ದೇಶನದ ,ನಟ ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಪ್ರಚಾರದಿಂದ ದೂರ ಉಳಿದಿದ್ದಾರೆ.
ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಜಾಕ್ವೆಲಿನ್ ಭಾಗವಹಿಸಿದ್ದರು. ಸದ್ಯ ಇ.ಡಿ. ವಿಚಾರಣೆ ಎದುರಿಸುತ್ತಿರುವುದರಿಂದ ಸಿನಿಮಾ ಪ್ರಚಾರಕ್ಕೆ ಬಂದಿಲ್ಲ ಎಂದು ಚಿತ್ರತಂಡ ತಿಳಿಸಿದೆ.
ಇತ್ತೀಚಿಗಷ್ಟೇ ಬಿಡುಗಡೆಯಾದ ಚಿತ್ರದ ಟ್ರೇಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಮೂಡಿಬಂದಿರುವ ಟ್ರೇಲರ್ನಲ್ಲಿ ಹಲವು ಕುತೂಹಲಕಾರಿ ಅಂಶಗಳು ಗಮನ ಸೆಳೆದಿವೆ. ಈ ಚಿತ್ರ ಜುಲೈ 28ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾಕ್ವೆಲಿನ್ ಅವರನ್ನು ಈಗಾಗಲೇ 2-3 ಬಾರಿ ವಿಚಾರಣೆ ನಡೆಸಿದ್ದ ಇ.ಡಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಅವರ ₹7.27 ಕೋಟಿ ಮೌಲ್ಯದ ನಗದನ್ನುತಾತ್ಕಾಲಿಕವಾಗಿ ವಶಕ್ಕೆ ಪಡೆದಿದೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.