‘ಪ್ಯಾಟಿ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನಲ್ಲಿ ವಿಜೇತರಾಗಿದ್ದ ಶರತ್ ತಮ್ಮದೇ ನಿರ್ಮಾಣದೊಂದಿಗೆ ‘ಸ್ಟಾರ್’ ಎಂಬ ಸಿನಿಮಾ ಪ್ರಾರಂಭಿಸಿದ್ದಾರೆ. ಚಿತ್ರಕ್ಕೆ ನಾಯಕ ಕೂಡ ಅವರೇ. ಅನು–ವಿಜಯಸೂರ್ಯ ದಂಪತಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವುದು ಮತ್ತೊಂದು ವಿಶೇಷ. ಇತ್ತೇಚೆಗಷ್ಟೇ ಈ ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ರವಿ ಸುಬ್ರಮಣ್ಯ ಕ್ಲಾಪ್ ಮಾಡಿ ಶುಭ ಹಾರೈಸಿದರು.
ಚಿತ್ರದ ನಾಯಕ ಹಾಗೂ ನಿರ್ಮಾಪಕ ಶರತ್ ಮಾತನಾಡಿ, ‘ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ. ಈ ಹಿಂದೆ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ವಿಜೇತನಾಗಿದ್ದೆ. ಜೊತೆಗೆ ರಂಗಭೂಮಿ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಆಧಾರಿತ ಕಥೆ. ಚಿತ್ರದಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೇಳಿದರೂ, ಯಾರ ಹೆಸರನ್ನೂ ಸಹ ಬಳಸಿಕೊಳ್ಳುವುದಿಲ್ಲ’ ಎಂದರು.