ಚಲನಚಿತ್ರ ವಾಣಿಜ್ಯಮಂಡಳಿ ಮುಂದೆ ಬ್ರಾಹ್ಮಣ ಸಮುದಾಯದ ಪ್ರತಿಭಟನೆ

ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬ್ರಾಹ್ಮಣ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಚಿತ್ರದ ಸನ್ನಿವೇಶಕ್ಕೆ ಸಂಬಂಧಿಸಿ ನಿರ್ದೇಶಕ ನಂದ ಕಿಶೋರ್ ಸ್ಪಷ್ಟನೆ ನೀಡಿ ಕ್ಷಮೆ ಕೋರಿದ್ದರೂ ಪಟ್ಟು ಬಿಡದ ಬ್ರಾಹ್ಮಣ ಸಮುದಾಯದ ಮುಖಂಡರು ಈ ಸಂಬಂಧಿಸಿ ವಾಣಿಜ್ಯ ಮಂಡಳಿಗೆ ದೂರು ನೀಡಲು ತೆರಳಿದ್ದರು. ಒಂದೆಡೆ ಮಾತುಕತೆ ನಡೆಯುತ್ತಿದೆ. ಮತ್ತೊಂದೆಡೆ ಪ್ರತಿಭಟನೆ ಜೋರಾಗಿಯೇ ನಡೆದಿದೆ.
ಮೊದಲು ಈ ಸನ್ನಿವೇಶ ತೆಗೆದುಹಾಕಿ. ಬಳಿಕ ಮಾತನಾಡಿ ಎಂಬುದು ಪ್ರತಿಭಟನಕಾರರ ವಾದ. ಒಮ್ಮೆ ಸೆನ್ಸಾರ್ ಆದ ಚಿತ್ರವನ್ನು ಮತ್ತೆ ಸಂಕಲನ ಮಾಡಬೇಕಾದರೆ ಅದಕ್ಕೆ ಸೆನ್ಸಾರ್ ಮಂಡಳಿಯ ಅನುಮತಿ ಬೇಕು. ದೃಶ್ಯವನ್ನು ತೆಗೆದುಹಾಕುವುದು ಅಥವಾ ಧ್ವನಿಯನ್ನು ತೆಗೆದು ಹಾಕುವುದು (ಮ್ಯೂಟ್) ಈ ಬಗ್ಗೆ ಪರಿಶೀಲನೆ ನಡೆದಿದೆ. ಅದುವರೆಗೆ ಚಿತ್ರ ಪ್ರದರ್ಶನಕ್ಕೆ ಸಹಕರಿಸಬೇಕು ಎಂದು ಚಿತ್ರತಂಡ ಕೋರಿದೆ.
ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ದೃಶ್ಯಗಳಿವೆ ಎಂದು ಆರೋಪಿಸಿರುವ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಅವರು, ಆ ದೃಶ್ಯಗಳನ್ನು ತೆಗೆಯಬೇಕು ಎಂದು ಆಗ್ರಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.