ನವದೆಹಲಿ: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿಗಳ ಆಯ್ಕೆ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಾಗಿದೆ. ರಾಜ್ಯದ ಮೂವರನ್ನು ರಾಜ್ಯಸಭೆಗೆ ಕಳುಹಿಸಿಕೊ
ಡುವಂತೆ ತಿಳಿಸಿ, ಮೂವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ ಅವರು, ಹೆಸರು ಬಹಿರಂಗಪಡಿಸಲು ನಿರಾಕರಿಸಿದರು.
ಲಿಂಗಾಯತ, ಅಲ್ಪಸಂಖ್ಯಾತ ಹಾಗೂ ದಲಿತ ಮುದಾಯದ ಎಡಗೈ ಬಣಕ್ಕೆ ಸೇರಿದ ಪ್ರಮುಖರೊಬ್ಬರನ್ನು ರಾಜ್ಯಸಭೆಗೆ ಆಯ್ಕೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿ ಅನುಷ್ಠಾನ ಮಾಡದ್ದರಿಂದ ತೀವ್ರ ಅಸಮಾಧಾನ ಹೊಂದಿರುವವರನ್ನು ಸಂತುಷ್ಟಗೊಳಿಸಲು ಲೋಕಸಭೆಯ ಮಾಜಿ ಸ್ಪೀಕರ್, ದಲಿತ ಸಮುದಾಯದ ಎಡಗೈ ಬಣಕ್ಕೆ ಸೇರಿರುವ ಮೀರಾ ಕುಮಾರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಇರಾದೆಯೂ ಪಕ್ಷದ ಮುಖಂಡರಿಗೆ ಇದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ, ಕಾಂಗ್ರೆಸ್ ಪರ ನಿಷ್ಠರಾಗಿರುವ ಸ್ಯಾಂ ಪಿತ್ರೋಡಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತು ವರಿಷ್ಠರು ಒಲವು ತೋರಿದ್ದಾರೆ ಎಂದು ಹೈಕಮಾಂಡ್ ಮೂಲಗಳು ಹೇಳಿವೆ.