ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ (95) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಸುಮಾರು 20 ವರ್ಷದಿಂದ ಹೃದಯದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಮವಾರ ಬೆಳಗ್ಗೆ 6.10ರಲ್ಲಿ ಅವರು ಇಹಲೋಕ ತ್ಯಜಿಸಿದರು.
ಭಗವಾನ್ ಅವರ ಪಾರ್ಥಿವ ಶರೀರವನ್ನು ಸಹಕಾರನಗರದಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ಮಧ್ಯಾಹ್ನ 12.30ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಭಗವಾನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಮೈಸೂರಿನಲ್ಲಿ ಜನಿಸಿದ್ದ ಎಸ್.ಕೆ.ಭಗವಾನ್ ಬೆಂಗಳೂರಿನಲ್ಲಿ ಶಿಕ್ಷಣ ಪಡೆದರು. ಹಿರಣ್ಣಯ್ಯ ಮಿತ್ರ ಮಂಡಳಿ ನಾಟಕಗಳ ಮೂಲಕ ಬಣ್ಣದ ಬದುಕನ್ನು ಆರಂಭಿಸಿದ್ದ ಭಗವಾನ್, ‘ಭಾಗ್ಯೋದಯ’ ಸಿನಿಮಾ ಮೂಲಕ ನಟನಾಗಿ ಚಿತ್ರರಂಗಕ್ಕೆ ಹೆಜ್ಜೆ ಇಟ್ಟರು. ಕ್ಯಾಮೆರಾಮೆನ್ ಆಗಿದ್ದ ದೊರೆರಾಜ್ ಜೊತೆಗೆ ಮದ್ರಾಸ್ನಲ್ಲಿದ್ದುಕೊಂಡು, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ, ವರನಟ ಡಾ.ರಾಜ್ಕುಮಾರ್ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ದೊರೆ–ಭಗವಾನ್ ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿತ್ತು.
‘ಜೇಡರ ಬಲೆ’ ದೊರೆ–ಭಗವಾನ್ ಜೋಡಿಯ ನಿರ್ದೇಶನದ ಮೊದಲ ಸಿನಿಮಾ. ‘ಗೋವಾದಲ್ಲಿ ಸಿ.ಐ.ಡಿ 99’, ‘ಆಪರೇಷನ್ ಡೈಮಂಡ್ ರಾಕೆಟ್’,‘ಆಪರೇಷನ್ ಜಾಕ್ಪಾಟ್ನಲ್ಲಿ ಸಿ.ಐ.ಡಿ 999’, ‘ಗಿರಿಕನ್ಯೆ’, ‘ಎರಡು ಕನಸು’, ‘ನಾನೊಬ್ಬ ಕಳ್ಳ’ ಹೀಗೆ ರಾಜ್ಕುಮಾರ್ ಅವರ 32 ಚಿತ್ರಗಳಿಗೆ ನಿರ್ದೇಶಕರಾಗಿ ಭಗವಾನ್ ಕಾರ್ಯನಿರ್ವಹಿಸಿದ್ದರು. ‘ಚಂದನದ ಗೊಂಬೆ’, ‘ಮುನಿಯನ ಮಾದರಿ’, ‘ಗಾಳಿ ಮಾತು’, ‘ಕಸ್ತೂರಿ ನಿವಾಸ’, ಹೊಸ ಬೆಳಕು ಮುಂತಾದುವುಗಳು ಅವರ ಇತರೆ ಸಿನಿಮಾಗಳು.
ಸಿಎಂ ಸಂತಾಪ
’ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕ ಶ್ರೀ SK ಭಗವಾನ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
— Dr. Ashwathnarayan C. N. (@drashwathcn) February 20, 2023
ಕಸ್ತೂರಿ ನಿವಾಸ, ಎರಡು ಕನಸು ಸಹಿತ ಹಲವು ಸದಭಿರುಚಿಯ ಚಿತ್ರಗಳ ಮೂಲಕ ಮನೆ ಮಾತಾಗಿದ್ದ ಭಗವಾನ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಕುಟುಂಬವರ್ಗದವರಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿ. pic.twitter.com/XCcvRXpOoT
ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.
— Siddaramaiah (@siddaramaiah) February 20, 2023
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/S6Xe4Bi0C8
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ವಿಧಿವಶರಾದ ಸುದ್ದಿ ಆಘಾತ ತಂದಿದೆ. ಸ್ಯಾಂಡಲ್ವುಡ್ನ ದಂತಕಥೆ ಎಂದೇ ಪ್ರಖ್ಯಾತಿ ಪಡೆದಿದ್ದ ಭಗವಾನ್ ಡಾ.ರಾಜ್ರವರ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದರು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 20, 2023
ಮತ್ತೊಬ್ಬ ನಿರ್ದೇಶಕ ದೊರೈರಾಜ್ ಜೊತೆ ಭಗವಾನ್ 27 ಚಿತ್ರಗಳನ್ನು ನಿರ್ದೇಶಿಸಿದ್ದರು. ಅಗಲಿದ ಚೇತನಕ್ಕೆ ಅಶ್ರುತರ್ಪಣಗಳು. pic.twitter.com/1EDMu97QOc
ಭಾವಪೂರ್ಣ ನಮನ🙏
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) February 20, 2023
ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕರು ಎಸ್.ಕೆ.ಭಗವಾನ್ ಇನ್ನಿಲ್ಲ.
ಭಗವಾನ್ ರವರು ಕನ್ನಡ ಚಿತ್ರರಂಗದಲ್ಲಿ ನಟರಾಗಿ,ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ದೊರೆ–ಭಗವಾನ್ ಖ್ಯಾತಿಯ ಜೋಡಿ ‘ಹೊಸಬೆಳಕು’,‘ಕಸ್ತೂರಿ ನಿವಾಸ’ಸೇರಿದಂತೆ 50ಕ್ಕೂ ಅಧಿಕ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. pic.twitter.com/ECc4yops6p
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.