ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಐಸಿಯುಗೆ ಸ್ಥಳಾಂತರಿಸಿದ್ದು, ಜೀವ ರಕ್ಷಕ ಉಪಕರಣಗಳ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು 'ಇಂಡಿಯಾ ಟುಡೆ' ಜಾಲತಾಣ ವರದಿ ಮಾಡಿದೆ.
ಪರಿಣತ ವೈದ್ಯರ ತಂಡ ಅವರಿಗೆ ಚಿಕಿತ್ಸೆಯನ್ನು ಮುಂದುವರಿಸಿದೆ ಎಂದು ಚೆನ್ನೈನ ಎಂಜಿಎಂ ಹೆಲ್ತ್ಕೇರ್ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ.
ಕಳೆದ ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್–19 ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಅವರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದರು.
‘ಕಳೆದ ಎರಡು– ಮೂರು ದಿನಗಳಿಂದ ನನ್ನ ಆರೋಗ್ಯ ಸರಿ ಇರಲಿಲ್ಲ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶೀತ ಮತ್ತು ಜ್ವರ ಕೂಡ ಕಾಣಿಸಿಕೊಂಡಿತು. ಇದರ ಬಗ್ಗೆ ನಾನು ನಿರ್ಲಕ್ಷ್ಯವಹಿಸದೆ ವೈದ್ಯರ ಬಳಿಗೆ ಚಿಕಿತ್ಸೆ ಪಡೆಯಲು ಮುಂದಾದೆ. ಪರೀಕ್ಷೆಯ ಬಳಿಕ ಕೊರೊನಾ ಸೋಂಕು ಸಣ್ಣ ಪ್ರಮಾಣದಲ್ಲಿದೆ. ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದರು. ಇದಕ್ಕೆ ನನ್ನ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಹಾಗಾಗಿ, ಆಸ್ಪತ್ರೆಗೆ ದಾಖಲಾದೆ. ನನ್ನ ಆರೋಗ್ಯದ ಬಗ್ಗೆ ಯಾರೊಬ್ಬರು ಚಿಂತಿಸಬೇಕಿಲ್ಲ. ನನ್ನ ಆರೋಗ್ಯ ವಿಚಾರಿಸಲು ಮೊಬೈಲ್ ಕರೆ ಮಾಡಬೇಡಿ. ಕರೆ ಸ್ವೀಕರಿಸುವ ಸ್ಥಿತಿಯಲ್ಲಿ ನಾನಿಲ್ಲ. ಶೀತದ ಹೊರತಾಗಿ ನಾನೀಗ ಚೆನ್ನಾಗಿದ್ದೇನೆ. ಜ್ವರವೂ ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಗುಣಮುಖನಾಗುತ್ತೇನೆ’ ಎಂದು ಅವರು ಈ ವಿಡಿಯೊದಲ್ಲಿ ತಿಳಿಸಿದ್ದರು.
ಕಳೆದ ತಿಂಗಳು ಬಾಲಸುಬ್ರಹ್ಮಣ್ಯಂ ಅವರು ಕೋವಿಡ್ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿಯಾಗಿದ್ದರು. ಈ ಹಾಡು ಸಾರ್ವಜನಿಕರಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ನೆರವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.