‘ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಇಂದು ಕೂಡ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಿನ್ನೆಯಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ವೈದ್ಯರು ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ’ ಎಂದು ಅವರ ಪುತ್ರ ಎಸ್.ಪಿ. ಚರಣ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಅಪ್ಪ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಟ, ನಟಿಯರು ಸೇರಿದಂತೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿರುವುದು ಖುಷಿ ತಂದಿದೆ. ನಮ್ಮ ಕುಟುಂಬದ ಮೇಲೆ ನೀವು ತೋರುತ್ತಿರುವ ಪ್ರೀತಿಗೆ ಬೆಲೆ ಕಟ್ಟಲಾಗದು. ಇದಕ್ಕಾಗಿ ನಮ್ಮ ಕುಟುಂಬ ನಿಮಗೆ ಆಭಾರಿಯಾಗಿದೆ ಎಂದು ಭಾವುಕರಾಗಿ ಹೇಳಿದ್ದಾರೆ.
‘ನಿಮ್ಮೆಲ್ಲರ ಪ್ರಾರ್ಥನೆ ದೇವರಿಗೆ ಮುಟ್ಟಲಿದೆ. ಅದೇ ಅಪ್ಪನಿಗೆ ಶ್ರೀರಕ್ಷೆಯಾಗಲಿದೆ’ ಎಂದಿದ್ದಾರೆ.
ಕೋವಿಡ್ –19 ದೃಢಪಟ್ಟ ಹಿನ್ನೆಲೆಯಲ್ಲಿ ಎಸ್ಪಿಬಿ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.