ನವದೆಹಲಿ: ಕೇರಳ ಸ್ಟೋರಿ ಚಿತ್ರ ಪ್ರದರ್ಶನವನ್ನು ನಿಷೇಧಿಸಿ ಮೇ8ರಂದು ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ನಿಷೇಧಕ್ಕೆ ನೀಡಿರುವ ಕಾರಣಗಳು ಸೂಕ್ತವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
‘ದೇಶದ ಎಲ್ಲ ಕಡೆ ಚಿತ್ರ ಪ್ರದರ್ಶನ ಕಾಣುತ್ತಿದೆ. ಸಂಪೂರ್ಣ ರಾಜ್ಯದಲ್ಲಿ ನೀವು ನಿಷೇಧ ಹೇರಲು ಬರುವುದಿಲ್ಲ. ಸಾರ್ವಜನಿಕ ಪ್ರದರ್ಶನದ ಮೂಲಭೂತ ಹಕ್ಕಿಗೆ ಧಕ್ಕೆ ತರುವಂತಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಜೆ.ಬಿ. ಪರದಿವಾಲಾ ಅವರನ್ನು ಒಳಗೊಂಡ ಪೀಠ ಹೇಳಿದೆ.
ಇದೇವೇಳೆ, ಚಿತ್ರದ ಪ್ರದರ್ಶನವನ್ನು ನಿಲ್ಲಿಸಲು ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಮತ್ತು ಚಲನಚಿತ್ರ ಪ್ರೇಕ್ಷಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಚಿತ್ರಮಂದಿರಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುವಂತೊ ನ್ಯಾಯಾಲಯವು ತಮಿಳುನಾಡು ಸರ್ಕಾರಕ್ಕೂ ನಿರ್ದೇಶಿಸಿದೆ.
ಚಲನಚಿತ್ರ ನಿರ್ಮಾಣ ಸಂಸ್ಥೆ ಸನ್ಶೈನ್ ಪಿಕ್ಚರ್ಸ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿತು.
ಸುದಿಪ್ತೊ ಸೇನ್ ನಿರ್ದೇಶನದ 'ದಿ ಕೇರಳ ಸ್ಟೋರಿ’ ಚಿತ್ರ ಮೂವರು ಯುವತಿಯರು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿ, ಐಎಸ್ಗೆ ಸೇರುವ ಕಥಾವಸ್ತುವನ್ನು ಹೊಂದಿದೆ.
ಬಿಡುಗಡೆಯಾಗಿ 13 ದಿನಕ್ಕೆ ಚಿತ್ರ ₹156 ಕೋಟಿ ಗಳಿಕೆ ಕಂಡಿದೆ.