ಹೈದರಾಬಾದ್: ತೆಲುಗು ಸಿನಿಮಾದ ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಜಾರಿ ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನವೆಂಬರ್ 20ರಂದು ಅವರ ಆರೋಗ್ಯ ಮತ್ತೆ ಕ್ಷಿಣಿಸಿದ ಪರಿಣಾಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬ ವರ್ಗದ ಮೂಲಗಳು ತಿಳಿಸಿವೆ.
ಸದ್ಯ ಸತ್ಯನಾರಾಯಣ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ನಿಧಾನವಾಗಿ ಸ್ಪಂದನೆ ನೀಡುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಸತ್ಯನಾರಾಯಣ ಅವರು ಬೇಗ ಗುಣಮುಖರಾಗಲಿ ಎಂದು ಟಾಲಿವುಡ್ ಸೇರಿದಂತೆ ಚಿತ್ರರಂಗದ ಗಣ್ಯರು ಆಶಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಪ್ರಕಟಿಸಿದ್ದಾರೆ.