ಅಂತರ್ಜಲ ಮಟ್ಟ ವೃದ್ಧಿಸಲು ಅನುಕೂಲ:‘ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾರೇ ಹೊಸದಾಗಿ ಕಟ್ಟಡ ನಿರ್ಮಿಸಲು ಅನುಮತಿಗಾಗಿ ಅರ್ಜಿ ಸಲ್ಲಿಸುವಾಗ, ಮಳೆ ನೀರು ಸಂಗ್ರಹ ಅಳವಡಿಕೆ ಮಾಡಿಕೊಂಡು ಪ್ರಮಾಣಪತ್ರ ನೀಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಮಳೆ ನೀರು ಸಂಗ್ರಹಿಸುವುದರಿಂದ ಆ ಕುಟುಂಬದವರಿಗೂ ಅನುಕೂಲ ಆಗುತ್ತದೆ. ಅದನ್ನು ಮರು ಬಳಕೆ ಮಾಡಿಕೊಳ್ಳಬಹುದಾಗಿದೆ. ಆ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿಯದಂತೆ ನೋಡಿಕೊಳ್ಳುವುದಕ್ಕೂ ಸಹಕಾರಿಯಾಗಿದೆ. ಬೇರೆಯವರಿಗೆ ಹೇಳುವ ಮೊದಲು ನಾವು ಮಾಡಬೇಕಲ್ಲವೇ? ಹೀಗಾಗಿ, ಪಂಚಾಯಿತಿ ಆವರಣದಲ್ಲಿ ಇಂಗು ಗುಂಡಿ ನಿರ್ಮಿಸಿದ್ದು, ಮಳೆ ನೀರಿನ ಸದ್ಬಳಕೆಗೆ ಕ್ರಮ ಕೈಗೊಂಡಿದ್ದೇವೆ’ ಎಂದು ಪಿಡಿಒ ಕೆ.ಎಸ್. ಗಣೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.