ರಾಜ್ಯದ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರು ಮತ್ತು ಮಕ್ಕಳ ಆರ್ಥಿಕ ಸಾಮಾಜಿಕ ಸ್ಥಿತಿಗತಿಗಳನ್ನು ಅರಿಯುವ ಉದ್ದೇಶದಿಂದ ಮಹಿಳಾ ಅಭಿವೃದ್ಧಿ ನಿಗಮವು ಕಳೆದ ವರ್ಷ ನಡೆಸಿದ್ದ ಮರು ಸಮೀಕ್ಷೆಯ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಸಲ್ಲಿಸಿದ್ದಾರೆ. 2007–08ರಲ್ಲಿ ನಡೆದ ಸಮೀಕ್ಷೆಗೆ ಹೋಲಿಸಿದರೆ, ಈಗ ನಡೆಸಿದ ಸಮೀಕ್ಷೆಯು ರಾಜ್ಯದಲ್ಲಿ ಮಾಜಿ ದೇವದಾಸಿಯರ ಸಂಖ್ಯೆ ಶೇ 50ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ. ಆದರೆ, ಅವರ ಆರ್ಥಿಕ, ಸಾಮಾಜಿಕ ಸ್ಥಿತಿಗಳಲ್ಲಿ ಸುಧಾರಣೆಯಾಗಿಲ್ಲ ಎಂದೂ ಹೇಳಿದೆ. ಈ ಸಮೀಕ್ಷೆಯನ್ನು ಸರಿಯಾಗಿ ನಡೆಸಲಾಗಿಲ್ಲ. ಸಂಖ್ಯೆ ಕಡಿಮೆಯಾಗಿರುವುದರಿಂದ ಹಲವು ಮಾಜಿ ದೇವದಾಸಿಯರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದು ಅವರ ಪರವಾಗಿ ಕೆಲಸ ಮಾಡುತ್ತಿರುವ ಕೆಲವು ಸಂಘಟನೆಗಳು ದೂರಿವೆ