'ದೆಹಲಿಯ ಕೀರ್ತಿನಗರ ಕೈಗಾರಿಕಾ ಪ್ರದೇಶದಲ್ಲಿ 10 ಹೊಸ ಕಸದಬುಟ್ಟಿಗಳನ್ನು ಅಳವಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆಗಳು' ಎಂಬ ಜಾಹೀರಾತು ಫಲಕ ಇರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 'ಕಸದ ಬುಟ್ಟಿ ಅಳವಡಿಸಿದ್ದಕ್ಕೂ ಎಎಪಿ ಸರ್ಕಾರ ಜಾಹೀರಾತು ನೀಡುತ್ತಿದೆ. ಕಸದಬುಟ್ಟಿಗಿಂತ ಜಾಹೀರಾತಿಗೆ ಹೆಚ್ಚು ಖರ್ಚಾಗುತ್ತಿದೆ' ಎಂದು ಬಿಜೆಪಿಯ ಹಲವು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮಾಧ್ಯಮ ಸಲಹೆಗಾರ ಶಲಭಾ ಮಣಿ ತ್ರಿಪಾಠಿ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ತಜಿಂದರ್ ಪಾಲ್ ಸಿಂಗ್ ಬಗ್ಗಾ ಮತ್ತು ದೆಹಲಿ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರು ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.