ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿದ್ದ ಹೂಡಿಕೆದಾರರ ಸಮ್ಮೇಳನದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ತಾವು ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಗಣನೀಯವಾಗಿ ಕಡಿಮೆ ಆಗಿದೆ ಎಂದಿದ್ದರು. ‘2017ರಲ್ಲಿ ಬಿಜೆಪಿ ಅಧಿಕಾರ ಹಿಡಿಯುವಾಗ ಉತ್ತರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 18ರಷ್ಟು ಇತ್ತು. ಹೂಡಿಕೆದಾರರಿಗೆ ನೆರವಾಗುವಂಥ ವಾತಾವರಣವನ್ನು ನಾವು ನಿರ್ಮಾಣ ಮಾಡಿದೆವು. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಎಂಬ ಯೋಜನೆ ಕೈಗೊಂಡೆವು. ಇದರಿಂದ ನಿರುದ್ಯೋಗ ಪ್ರಮಾಣ ಕಡಿಮೆ ಆಯಿತು ಎಂದಿದ್ದರು.
ಆದಿತ್ಯನಾಥ ಅವರು ನೀಡಿರುವ ಹೇಳಿಕೆ ದಾರಿ ತಪ್ಪಿಸುವಂತಿದೆ ಎಂದು ‘ದಿ ಕ್ವಿಂಟ್’ ವೇದಿಕೆ ವರದಿ ಮಾಡಿದೆ. ‘ಸೆಂಟರ್ ಫಾರ್ ಮಾನಿಟರಿಂಗ್ ದ ಇಂಡಿಯನ್ ಎಕಾನಮಿ’ (ಸಿಎಂಐಇ) ಸಂಸ್ಥೆಯು ಪ್ರಕಟಿಸಿದ, ದೇಶದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ವರದಿ ಪ್ರಕಾರ, ಉತ್ತರ ಪ್ರದೇಶದಲ್ಲಿ 2017ರ ಮಾರ್ಚ್ನಲ್ಲಿ ನಿರುದ್ಯೋಗ ಪ್ರಮಾಣ ಶೇ 2.4ರಷ್ಟಿತ್ತು. ಅದೇ ವೇಳೆ ಆದಿತ್ಯನಾಥ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದರು. 2020ರ ಏಪ್ರಿಲ್ನಲ್ಲಿ ನಿರುದ್ಯೋಗ ಪ್ರಮಾಣ ಶೇ 21.5ರಷ್ಟಕ್ಕೆ ತಲುಪಿತ್ತು. 2022ರ ಏಪ್ರಿಲ್ನಲ್ಲಿ ನಿರುದ್ಯೋಗ ಪ್ರಮಾಣ ಶೇ 2.9 ರಷ್ಟಿತ್ತು. ಆದಿತ್ಯನಾಥ ಅಧಿಕಾರ ಹಿಡಿಯುವ ಮುನ್ನವೇ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇತ್ತು ಎಂದುಸಿಎಂಐಇ ವರದಿ ಹೇಳುತ್ತದೆ ದಿ ಕ್ವಿಂಟ್ ವರದಿಯಲ್ಲಿ ವಿವರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.