ನಾಯಕನಹಟ್ಟಿ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಏ.24ರಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಜೆಡಿಎಸ್ ಅಭ್ಯರ್ಥಿ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಪಕ್ಷದಿಂದ ಈಗಾಗಲೇ ಕಳೆದ ಶುಕ್ರವಾರ ಅನೌಪಚಾರಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏ. 24 ರಂದು ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ರೋಡ್ ಷೋ ನಡೆಸಿ ನಾಮಪತ್ರ ಸಲ್ಲಿಸಲಾಗುವುದು ಎಂದರು.
2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಆರ್ ಪಕ್ಷದಿಂದ ನನಗೆ ಟಿಕೆಟ್ ನೀಡುವುದಾಗಿ ನಂಬಿಸಿದ್ದರು. ಕೊನೆ ಗಳಿಗೆಯಲ್ಲಿ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರಿಂದಾಗಿ ಟಿಕೆಟ್ ಕೈ ತಪ್ಪಿತು. ಈ ಬಾರಿ ಕ್ಷೇತ್ರದ ಜನತೆ ಜೆಡಿಎಸ್ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡ ಎಸ್. ಓಬಣ್ಣ ಮಾತನಾಡಿ, ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತಪರ ಜನಪರ ಆಡಳಿತ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಹಾಗಾಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ಏ.24 ರಂದು ನಾಮಪತ್ರ ಸಲ್ಲಿಸುವ ವೇಳೆ ಮೊಳಕಾಲ್ಮುರಿಗೆ ನಟ ನಿಖಿಲ್ ಗೌಡ, ಹೊಸದುರ್ಗ ಜೆಡಿಎಸ್ ಅಭ್ಯರ್ಥಿ ಶಶಿಕುಮಾರ್, ನಟಿಯರಾದ ಅಮೂಲ್ಯ, ಪೂಜಾ ಗಾಂಧಿ, ಸಂಗೀತ ನಿರ್ದೇಶಕ ಗುರುಕಿರಣ್, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆಗಮಿಸಲಿದ್ದಾರೆ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.