ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಸಿಂಘು, ಘಾಜಿಪುರ್ ಮತ್ತು ಟಿಕ್ರಿ ಗಡಿ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧಿಸಿ, ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರತಿಭಟನಾಕಾರರು ಬರುವ ವಾಹನಗಳು ನಗರವನ್ನು ಪ್ರವೇಶಿಸದಂತೆ ತಡೆಯಲು ಕಾಂಕ್ರಿಟ್ ತಡೆಗೋಡೆ ಮತ್ತು ಕಬ್ಬಿಣದ ಮೊಳೆಗಳನ್ನು ರಸ್ತೆಗಳಲ್ಲಿ ಅಳವಡಿಸಲಾಗಿದೆ. ಇದರಿಂದಾಗಿ, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ‘ದೆಹಲಿ ಚಲೊ’ಗೆ ಕರೆ ನೀಡಿವೆ. ದೇಶದ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ.
ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು, ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗಿನ ನಗರದ ಗಡಿ ಪ್ರದೇಶಗಳಿಗೆ ಭಾನುವಾರವೇ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯ ಪರಿಶೀಲನೆ ನಡೆಸಿದ್ದಾರೆ.