ನವದೆಹಲಿ: ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ (ಮರಣೋತ್ತರ) ಘೋಷಿಸಲಾಗಿದೆ.
ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ‘ಸಾಮಾಜಿಕ ನ್ಯಾಯ’ದ ಅಸ್ತ್ರಕ್ಕೆ ಪ್ರತ್ಯುತ್ತರ ನೀಡುವ ಪ್ರಯತ್ನದ ಭಾಗವಾಗಿ ನರೇಂದ್ರ ಮೋದಿ ಸರ್ಕಾರವು ಕರ್ಪೂರಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಿದೆ ಎಂದು ವಿಶ್ಲೇಷಿಸಲಾಗಿದೆ. ಅದೇ ರೀತಿ, ಲೋಕಸಭೆ ಚುನಾವಣೆಗೂ ಮುನ್ನ ಅತ್ಯಂತ ಹಿಂದುಳಿದ ವರ್ಗಗಳನ್ನು ಓಲೈಸುವ ತಂತ್ರಗಾರಿಕೆಯೂ ಇದರ ಹಿಂದೆ ಅಡಗಿದೆ ಎನ್ನಲಾಗಿದೆ.
ಕರ್ಪೂರಿ ಅವರ ಜನ್ಮಶತಮಾನೋತ್ಸವಕ್ಕೆ ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಈ ಘೋಷಣೆ ಮಾಡಿದರು. ‘ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಸಂತಸವಾಗುತ್ತಿದೆ’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.